
ನವದೆಹಲಿ: ನೀಟ್ ಅಕ್ರಮವನ್ನು ಖಂಡಿಸಿ ನಡೆದ ಪ್ರತಿಭಟನೆ ವೇಳೆ ಬಂಧನಕ್ಕೊಳಗಾದ ವಿದ್ಯಾರ್ಥಿಗಳಿಗೆ ಕಾನೂನು ನೆರವು ಒದಗಿಸಲು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಿಸಿರುವ ನಿಧಿಗೆ ₹1 ಕೋಟಿ ದೇಣಿಗೆ ನೀಡುವುದಾಗಿ ಹಿರಿಯ ವಕೀಲ ಹಾಗೂ ರಾಜ್ಯಸಭಾ ಸಂಸದ ಕಪಿಲ್ ಸಿಬಲ್ ಸೋಮವಾರ ಘೋಷಿಸಿದರು.
ದೇಶದಾದ್ಯಂತ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಿಮಿನಲ್ ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ ಎಂದು ಬಿಜೆಪಿ ವಕ್ತಾರ ಸೌರವ್ ದಾಸ್ ಆತಂಕ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಕರಣ ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಕಾನೂನು ನೆರವು ನೀಡಲು ಮುಂದಾಗಿರುವುದಾಗಿ ಸಿಬಲ್ ತಿಳಿಸಿದ್ದಾರೆ.
ಬಿಹಾರ, ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಮಾಹಿತಿ ಸಂಗ್ರಹಿಸಲು ವಿಶೇಷ ವ್ಯವಸ್ಥೆ ರೂಪಿಸಲಾಗುತ್ತಿದೆ. ಇದರಿಂದ ವಕೀಲರು ಅವರಿಗೆ ತಕ್ಷಣ ಕಾನೂನು ನೆರವು ನೀಡಲು ಸಾಧ್ಯವಾಗಲಿದೆ ಎಂದು ಅವರು ಹೇಳಿದರು.
ಶಾಂತಿಯುತ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಎಫ್ಐಆರ್ ದಾಖಲಿಸಬಾರದು. ಈಗಾಗಲೇ ದಾಖಲಾಗಿರುವ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ಆಗ್ರಹಿಸಿದ ಸಿಬಲ್, ತಮ್ಮಿಂದ ₹1 ಕೋಟಿ ದೇಣಿಗೆ ನೀಡಲಾಗಿದೆ. ಇತರ ವಕೀಲರೂ ಈ ನಿಧಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಪ್ರಕರಣ ಎದುರಿಸುತ್ತಿರುವ ವಿದ್ಯಾರ್ಥಿಗಳ ವಿವರಗಳನ್ನು ದಾಖಲಿಸಲು ಸಿಜೆಪಿ ಶೀಘ್ರದಲ್ಲೇ ವಿಶೇಷ ವೆಬ್ಸೈಟ್ ಆರಂಭಿಸಲಿದೆ. ಉಚಿತ ಕಾನೂನು ಸೇವೆ ನೀಡಲು ಆಸಕ್ತ ವಕೀಲರು ಅದರ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಅವರು ತಿಳಿಸಿದರು.


















































