ಜಿಲ್ಲೆಯ ಜನತೆ,ಮುಂದೆ ಇಂಥವರ ಆಯ್ಕೆಯ ಬಗ್ಗೆ ಯೋಚಿಸಿ : ಶುಭದ ರಾವ್

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ದೆಹಲಿಯಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗೆ ಪ್ರತಿಯಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ಕೊಲೆ ಬೆದರಿಕೆ ಹಾಕಿರುವುದು ಅತ್ಯಂತ ಖಂಡನೀಯ ಮತ್ತು ಪ್ರಜಾಪ್ರಭುತ್ವ ವಿರೋಧಿ ನಡೆ ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತವು ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಸಂವಿಧಾನಬದ್ಧವಾದ ಗೌರವವಿದೆ. ಅಂತಹ ಉನ್ನತ ಸ್ಥಾನದಲ್ಲಿರುವ ನಾಯಕರ ವಿರುದ್ಧ ಒಬ್ಬ ಜನಪ್ರತಿನಿಧಿಯೇ ಬೀದಿ ರೌಡಿಯಂತೆ ಭಾಷೆ ಬಳಸುತ್ತಾ ಕೊಲೆ ಬೆದರಿಕೆ ಹಾಕಿರುವುದು ಯಾವ ಕಾರಣಕ್ಕೂ ಸಹನೀಯವಲ್ಲ. ಇದೇ ಸಂದರ್ಭದಲ್ಲಿ ಚಿತ್ರನಟ ಪ್ರಕಾಶ್ ರೈ ಅವರಿಗೂ ಜೀವ ಬೆದರಿಕೆ ಹಾಕಿರುವುದು ಶಾಸಕರ ಮನಸ್ಥಿತಿಯನ್ನು ಬಯಲಿಗೆಳೆಯುತ್ತದೆ.
ತತ್ವ, ಸಿದ್ಧಾಂತಗಳ ಭಿನ್ನಾಭಿಪ್ರಾಯಗಳಿದ್ದರೂ ಪ್ರಜಾಪ್ರಭುತ್ವದಲ್ಲಿ ಚರ್ಚೆಗಳ ಮೂಲಕವೇ ಭಿನ್ನಾಭಿಪ್ರಾಯಗಳನ್ನು ವ್ಯಕ್ತಪಡಿಸಬೇಕು. ಆದರೆ ಬಿಜೆಪಿ ಶಾಸಕರೇ ಸಾರ್ವಜನಿಕ ವೇದಿಕೆಯಲ್ಲಿ ಹಿಂಸಾತ್ಮಕ ಭಾಷೆ ಬಳಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಸದಾ ಉದ್ರಿಕ್ತ ವಾತಾವರಣ ನಿರ್ಮಿಸುವ ಕೆಲ ಕಾರ್ಯಕರ್ತರಿಗೆ ಇಂತಹ ಹೇಳಿಕೆಗಳು ಪರೋಕ್ಷವಾಗಿ ಹಿಂಸೆಗೆ ಪ್ರಚೋದನೆ ನೀಡುವಂತಿವೆ. ಇದರಿಂದ ಜಿಲ್ಲೆಯ ಶಾಂತಿ ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಅಪಾಯವಿದೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಪ್ರತಿಭಟಿಸುವ ಹಕ್ಕಿದೆ. ಆದರೆ ಯಾರ ಜೀವಕ್ಕೂ ಬೆದರಿಕೆ ಹಾಕುವ ಹಕ್ಕು ಯಾರಿಗೂ ಇಲ್ಲ. ಉಡುಪಿ ಶಾಸಕರು ತಮ್ಮ ಮಿತಿಯನ್ನು ಮೀರಿ ನೀಡಿರುವ ಈ ಹೇಳಿಕೆ ಸುಶಿಕ್ಷಿತರ ಜಿಲ್ಲೆ, ಸುಸಂಸ್ಕೃತರ ಜಿಲ್ಲೆ ಎಂಬ ಹೆಗ್ಗಳಿಕೆಯನ್ನು ಪಡೆದಿರುವ ಉಡುಪಿಗೆ ಕಪ್ಪು ಚುಕ್ಕೆಯಾಗಿದೆ. ಅಲ್ಲದೆ, ಈ ಭಾಷಣದ ವೇಳೆ ಉಪಸ್ಥಿತರಿದ್ದ ಕಾರ್ಕಳ ಶಾಸಕ ಸುನೀಲ್ ಕುಮಾರ್ ಅವರು ಸಹ ಇದಕ್ಕೆ ಬೆಂಬಲ ಸೂಚಿಸುವ ರೀತಿಯಲ್ಲಿ ಕೇಕೆ ಹಾಕಿರುವುದು ಬಿಜೆಪಿ ನಾಯಕರ ರಾಜಕೀಯ ಸಂಸ್ಕಾರವನ್ನು ಪ್ರತಿಬಿಂಬಿಸುತ್ತದೆ.
ಆದ್ದರಿಂದ ಕೊಲೆ ಬೆದರಿಕೆ ಹಾಕಿರುವ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು. ಜಿಲ್ಲೆಯ ಜನತೆ ಇಂತಹ ಪ್ರಚೋದನಕಾರಿ ಹೇಳಿಕೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದೆ ಇಂತವರ ಆಯ್ಕೆಯ ಬಗ್ಗೆ ಯೋಚನೆ ಮಾಡಬೇಕು ಎಂದು ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶುಭದ ರಾವ್ ತಮ್ಮ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.






















































