
ಕಾರ್ಕಳ, ಆ. 4: ಕಾರ್ಕಳ ತಾಲೂಕಿನ ರೆಂಜಾಳ ಗ್ರಾಮದ ಹೆಡ್ಮೆ ಪ್ರದೇಶದಲ್ಲಿ ಹರಿಪ್ರಸಾದ್ ಹಾಗೂ ಸುಮಿತ್ರಾ ಅವರ ಮನೆಯ ಸಮೀಪ ಭೂಕುಸಿತ ಸಂಭವಿಸಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಮಂಗಳವಾರ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಭೂಕುಸಿತದಿಂದ ಆತಂಕಕ್ಕೊಳಗಾದ ಕುಟುಂಬದ ಸದಸ್ಯರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿಗಳು, ಸುರಕ್ಷತೆಯ ದೃಷ್ಟಿಯಿಂದ ತಾತ್ಕಾಲಿಕವಾಗಿ ರೆಂಜಾಳ ಸರ್ಕಾರಿ ಶಾಲೆಯಲ್ಲಿ ತೆರೆಯಲಾಗಿರುವ ಗಂಜಿ ಕೇಂದ್ರದಲ್ಲಿ ವಾಸ್ತವ್ಯ ಹೂಡುವಂತೆ ಸೂಚಿಸಿದರು.ಇದೇ ವೇಳೆ, ಭೂಕುಸಿತ ಸಂಭವಿಸಿರುವ ಪ್ರದೇಶಕ್ಕೆ ಸಾರ್ವಜನಿಕರು ಯಾರೂ ತೆರಳದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸ್ಥಳದಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖೆಗೆ ನಿರ್ದೇಶನ ನೀಡಿದರು.
ಸಂತ್ರಸ್ತರಿಗೆ ಗಂಜಿ ಕೇಂದ್ರದಲ್ಲಿ ಅಗತ್ಯವಿರುವ ಎಲ್ಲಾ ಮೂಲಭೂತ ಸೌಕರ್ಯಗಳು, ಆಹಾರ ಹಾಗೂ ಅಗತ್ಯ ಸೇವೆಗಳನ್ನು ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಭರವಸೆ ನೀಡಿದರು.ಭಾರೀ ಮಳೆಯ ಹಿನ್ನೆಲೆ ಗುಡ್ಡ ಪ್ರದೇಶಗಳಲ್ಲಿ ವಾಸಿಸುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು ಹಾಗೂ ಆಡಳಿತದಿಂದ ನೀಡಲಾಗುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

























































