
ಕೊಪ್ಪಳ: ರಾಜ್ಯ ಸರ್ಕಾರದ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಅಕ್ರಮ ನಡೆದಿರುವುದು ಪತ್ತೆಯಾಗಿದೆ. ಮೃತಪಟ್ಟ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೂ ಹಣ ಜಮೆಯಾಗುತ್ತಿರುವುದು ಬೆಳಕಿಗೆ ಬಂದಿದ್ದು, ತನಿಖೆ ನಡೆಸಿದ ಗ್ಯಾರಂಟಿ ಯೋಜನೆಗಳ ಜಾರಿ ಸಮಿತಿ ಇದುವರೆಗೆ ₹86 ಲಕ್ಷ ವಸೂಲಿ ಮಾಡಿದೆ. ಈ ಕುರಿತು ಜಿಲ್ಲಾ ಗ್ಯಾರಂಟಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.
ಜಿಲ್ಲೆಯಲ್ಲಿ ಒಟ್ಟು 7,085 ಮೃತ ಫಲಾನುಭವಿಗಳ ಖಾತೆಗಳಿಗೆ ಹಣ ವರ್ಗಾವಣೆಯಾಗಿರುವುದು ಪರಿಶೀಲನೆಯ ವೇಳೆ ಗೊತ್ತಾಗಿದೆ. ಕೆಲ ಕುಟುಂಬಗಳು ಫಲಾನುಭವಿಗಳ ಸಾವಿನ ಮಾಹಿತಿಯನ್ನು ಇಲಾಖೆಗೆ ನೀಡಿರಲಿಲ್ಲ. ಮರಣ ಪ್ರಮಾಣ ಪತ್ರ ಹಾಗೂ ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿದ ಬಳಿಕ ಪ್ರಕರಣಗಳು ಪತ್ತೆಯಾಗಿವೆ.
ಮೃತರ ಖಾತೆಗಳಿಂದ ಹಣ ಡ್ರಾ ಮಾಡಿರುವ ಹಾಗೂ ಡ್ರಾ ಮಾಡದೆ ಉಳಿದಿರುವ ಪ್ರಕರಣಗಳನ್ನು ಪರಿಶೀಲಿಸಿ ₹86 ಲಕ್ಷವನ್ನು ಸರ್ಕಾರಕ್ಕೆ ಮರಳಿಸಲಾಗಿದೆ. ಈ ವಿಚಾರವನ್ನು ಮುಖ್ಯಮಂತ್ರಿ ಗಮನಕ್ಕೂ ತರಲಾಗಿದೆ. ಮೃತರ ಖಾತೆಗಳ ಮೂಲಕ ಒಟ್ಟಾರೆ ₹2ರಿಂದ ₹3 ಕೋಟಿ ಹಣ ತಪ್ಪಾಗಿ ವರ್ಗಾವಣೆಯಾಗಿರುವ ಸಾಧ್ಯತೆಯಿದೆ ಎಂದು ಅಂದಾಜಿಸಲಾಗಿದೆ.
ಪರಿಶೀಲನೆಯಲ್ಲಿ ಸುಮಾರು 26 ಸಾವಿರ ಬಹುವಿಧ ಖಾತೆಗಳು ಪತ್ತೆಯಾಗಿದ್ದು, ಕೆಲ ಫಲಾನುಭವಿಗಳ ಖಾತೆಗಳು ಹೊರ ರಾಜ್ಯಗಳಲ್ಲಿರುವುದು ಕೂಡ ಗೊತ್ತಾಗಿದೆ. ಕೊಪ್ಪಳದಲ್ಲಿ 3,13,500 ಗೃಹಲಕ್ಷ್ಮಿ ಫಲಾನುಭವಿಗಳಿದ್ದು, ಪ್ರತಿ ತಿಂಗಳು ಸುಮಾರು ₹63 ಕೋಟಿ ಜಮೆಯಾಗುತ್ತಿದೆ. ಸರ್ಕಾರದ ಸೂಚನೆಯಂತೆ ಇದೀಗ ಎಲ್ಲ ಖಾತೆಗಳನ್ನೂ ಪರಿಶೀಲಿಸಲಾಗುತ್ತಿದೆ.
ಇದೇ ರೀತಿಯ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಈ ಹಿಂದೆ ಬೆಳಕಿಗೆ ಬಂದಿತ್ತು. ಅಲ್ಲಿ ಮೃತಪಟ್ಟ ಫಲಾನುಭವಿಗಳ ಖಾತೆಗಳಿಗೆ ಸುಮಾರು ₹22 ಕೋಟಿ ಜಮೆಯಾಗಿರುವುದು ಪತ್ತೆಯಾಗಿತ್ತು. ಬಳಿಕ ಜಿಲ್ಲಾಡಳಿತ ಹಣ ವಾಪಸ್ ಪಡೆಯಲು ಹಾಗೂ ಸಂಬಂಧಿತ ಖಾತೆಗಳನ್ನು ಸ್ಥಗಿತಗೊಳಿಸಲು ಕ್ರಮ ಕೈಗೊಂಡಿತ್ತು. ಮತ್ತೊಂದೆಡೆ, ಕೆಲವು ಜೀವಂತ ಫಲಾನುಭವಿಗಳನ್ನು ಇಲಾಖೆಯ ದಾಖಲೆಗಳಲ್ಲಿ ‘ಮೃತರು’ ಎಂದು ನಮೂದಿಸಿರುವುದು ಪತ್ತೆಯಾಗಿದ್ದು, ಈ ಬಗ್ಗೆಯೂ ಸಮಗ್ರ ತನಿಖೆಗೆ ಸೂಚಿಸಲಾಗಿತ್ತು.

























































