
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೆ ಜೈಲು ಸೇರಿ ಸುಮಾರು ಒಂದು ವರ್ಷವಾಗುತ್ತಿದೆ. ಸುಪ್ರೀಂ ಕೋರ್ಟ್ ಹೈಕೋರ್ಟ್ ನೀಡಿದ್ದ ಜಾಮೀನು ರದ್ದುಗೊಳಿಸಿದ ಬಳಿಕ ಪೊಲೀಸರು ಅವರನ್ನು ಮನೆಯಿಂದಲೇ ವಶಕ್ಕೆ ಪಡೆದು ಪರಪ್ಪನ ಅಗ್ರಹಾರಕ್ಕೆ ಕರೆದೊಯ್ದಿದ್ದರು. ಇದೀಗ ದರ್ಶನ್ಗೆ ಮತ್ತೆ ಜಾಮೀನು ಸಿಗುವ ಸೂಚನೆ ಕಾಣುತ್ತಿಲ್ಲ.
ದರ್ಶನ್ ಜೈಲು ಸೇರಿ ಒಂದು ವರ್ಷವಾಗುತ್ತಿರುವ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಇನ್ಸ್ಟಾಗ್ರಾಂನಲ್ಲಿ ಭಾವುಕ ಪೋಸ್ಟ್ ಹಂಚಿಕೊಂಡಿದ್ದಾರೆ. ‘ಒಂದು ವರ್ಷ ಕಳೆದಿದೆ. ಆದರೂ ಗಾಯ ಇನ್ನೂ ವಾಸಿಯಾಗಿಲ್ಲ, ನೋವು ಮಾತ್ರ ಇನ್ನೂ ಸಹಿಸಲಾಗದಷ್ಟು ಕಾಡುತ್ತಿದೆ. ಅರ್ಥಮಾಡಿಕೊಳ್ಳಲಾಗದ ವಿಷಯವನ್ನು ಜಗತ್ತು ತನ್ನದೇ ರೀತಿಯಲ್ಲಿ ತೀರ್ಮಾನಿಸಬಹುದು. ಆದ್ರೀಗ ನಾನು ಯಾರಿಗೂ ವಿವರಿಸುವುದನ್ನು ನಿಲ್ಲಿಸಿದ್ದೇನೆ. ಈಗ ಸುಮ್ಮನೆ ನಗುತ್ತೇನೆ. ಉಳಿದದ್ದನ್ನ ಕಾಲಕ್ಕೂ, ದೇವರಿಗೂ ಬಿಟ್ಟಿದ್ದೇನೆ’ ಎಂದು ತಿಳಿಸಿದ್ದಾರೆ.
ಇದರ ಬೆನ್ನಲ್ಲೇ ದರ್ಶನ್ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ರೇಣುಕಾಸ್ವಾಮಿ ಕೊಲೆಯ ದಿನ ದರ್ಶನ್ ಜೊತೆಗಿದ್ದ ಆರೋಪಿ ಪ್ರದೂಷ್ ಇದೀಗ ಮಾಫಿ ಸಾಕ್ಷಿಯಾಗಲು ಮುಂದಾಗಿದ್ದಾರೆ. ಪ್ರಕರಣದ ಹಲವು ಘಟನೆಗಳಿಗೆ ಪ್ರದೂಷ್ ಸಾಕ್ಷಿಯಾಗಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ದರ್ಶನ್ಗೆ ಕಂಟಕವಾಗುವ ಸಾಧ್ಯತೆ ಇದೆ.
ಮಾಫಿ ಸಾಕ್ಷಿ ವಿಚಾರದಲ್ಲಿ ದರ್ಶನ್ ಪರ ವಕೀಲರಿಗೆ ವಾದ ಮಂಡಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಅವರು ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ಕೆಳ ನ್ಯಾಯಾಲಯದ ಆದೇಶದಲ್ಲಿ ಮಧ್ಯಪ್ರವೇಶಿಸಲು ಹೈಕೋರ್ಟ್ ನಿರಾಕರಿಸಿದ್ದು, ದರ್ಶನ್ ಪರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.
ಇತ್ತ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆ ಮುಂದುವರಿದಿದ್ದು, ಆರೋಪಿಗಳು ಪ್ರತಿದಿನ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗುತ್ತಿದ್ದಾರೆ. ದರ್ಶನ್ ಸೇರಿದಂತೆ ಆರೋಪಿಗಳು ವಿಚಾರಣೆಗೆ ಹಾಜರಾದರೂ, ಪವಿತ್ರಾ ಗೌಡ ತಡವಾಗಿ ಹಾಜರಾಗಿದ್ದು ನ್ಯಾಯಾಧೀಶರ ಅಸಮಾಧಾನಕ್ಕೆ ಕಾರಣವಾಗಿದೆ.




























































