ಚುನಾವಣಾ ವ್ಯವಸ್ಥೆ ಹದಗೆಟ್ಟಿದ್ದು, ದುಬಾರಿಯಾಗಿದೆ : ಸಿದ್ದರಾಮಯ್ಯ

ತುಮಕೂರು: ಮುಂದಿನ ಚುನಾವಣೆಯಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. 80 ವರ್ಷ ವಯಸ್ಸಾಗಿದ್ದರೂ ಆರೋಗ್ಯವಾಗಿದ್ದು, ವಯಸ್ಸಿನ ಕಾರಣಕ್ಕೆ ಈ ನಿರ್ಧಾರ ಕೈಗೊಂಡಿಲ್ಲ. ಬದಲಾಗಿ, ಚುನಾವಣಾ ವ್ಯವಸ್ಥೆ ದುಬಾರಿಯಾಗಿರುವುದು ಮತ್ತು ಹದಗೆಟ್ಟಿರುವುದೇ ಕಾರಣ ಎಂದು ತಿಳಿಸಿದ್ದಾರೆ.
ತುಮಕೂರಿನಲ್ಲಿ ನಡೆದ ವೀರಣ್ಣನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಚುನಾವಣೆ ವ್ಯವಸ್ಥೆ ಬಹಳ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂಬ ಅಭಿಪ್ರಾಯ ನನ್ನದು. ಆದರೆ, ಸಕ್ರಿಯ ರಾಜಕಾರಣದಲ್ಲಿ ಇರುತ್ತೇನೆ. ವ್ಯವಸ್ಥೆ ಸುಧಾರಣೆಯಾಗದೆ ನಾನು ಪ್ರಾಮಾಣಿಕ ಎಂದರೆ ಆತ್ಮವಂಚನೆಯಾಗುತ್ತದೆ ಎಂದರು.
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಈ ಹಿಂದೆ ಆಫರ್ ಬಂದಿದ್ದರೂ ಅದನ್ನು ತಿರಸ್ಕರಿಸಿದ್ದಾಗಿ ಹೇಳಿದ ಸಿದ್ದರಾಮಯ್ಯ 1991ರಲ್ಲಿ ಕೊಪ್ಪಳದಿಂದ ಲೋಕಸಭೆಗೆ ಸ್ಪರ್ಧಿಸಿ 10 ಸಾವಿರ ಮತಗಳ ಅಂತರದಿಂದ ಸೋತಿದ್ದೆ. ಆ ಬಳಿಕ ಲೋಕಸಭೆಗೆ ಮತ್ತೆ ಸ್ಪರ್ಧಿಸಬಾರದು ಎಂದು ನಿರ್ಧರಿಸಿದ್ದಾಗಿ ತಿಳಿಸಿದರು.
ಇನ್ನು ಮುಂದೆ ಲೋಕಸಭೆ ಹಾಗೂ ವಿಧಾನಸಭೆ ಎರಡೂ ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಿದ್ದರಾಮಯ್ಯ ಘೋಷಿಸಿದರು.
ಚುನಾವಣಾ ಆಯೋಗ ನಿಗದಿಪಡಿಸಿದ ಮಿತಿಯಲ್ಲೇ ಅಭ್ಯರ್ಥಿಗಳು ಹಣ ಖರ್ಚು ಮಾಡಬೇಕು. ಆದರೆ ಪ್ರಸ್ತುತ ಚುನಾವಣೆಯಲ್ಲಿ ಪರಿಸ್ಥಿತಿ ಹಾಗಿಲ್ಲ. 1983 ಮತ್ತು 2023ರ ಚುನಾವಣೆಗಳ ನಡುವೆ ಸಾಕಷ್ಟು ಬದಲಾವಣೆಯಾಗಿದ್ದು, ಅಕ್ರಮ ಹಣದ ಬಳಕೆಯನ್ನು ತಡೆಯಲು ಹೋರಾಟ ಅಗತ್ಯ ಎಂದು ಅವರು ಹೇಳಿದರು.






















































































