
ಕಲಬುರಗಿ: ಕೆಪಿಎಸ್ಸಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ವಿಕೆಟ್ ಬೀಳಲಿದೆ ಎಂಬ ವಿಪಕ್ಷ ನಾಯಕ ಆರ್. ಅಶೋಕ ಅವರ ಹೇಳಿಕೆಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬಿಜೆಪಿ–ಜೆಡಿಎಸ್ ನಾಯಕರು ಎಸೆಯುವ ನೋಬಾಲ್ ಹಾಗೂ ಫುಲ್ಟಾಸ್ಗಳಿಂದ ತಮ್ಮ ವಿಕೆಟ್ ಬೀಳುವುದಿಲ್ಲ ಎಂದು ಅವರು ವ್ಯಂಗ್ಯವಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬೌಲರ್ಗಳ ಸಾಮರ್ಥ್ಯ ರಾಜ್ಯದ ಜನತೆಗೆ ಚೆನ್ನಾಗಿ ತಿಳಿದಿದೆ. ಅಂಪೈರ್ ಯಾರೇ ಇದ್ದರೂ ಕೊನೆಗೆ ವಿಕೆಟ್ ಬೀಳುವುದು ಅವರದ್ದೇ ಎಂದು ಟೀಕಿಸಿದರು.
ಕೆಪಿಎಸ್ಸಿ ಪ್ರಕರಣದ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಗೆ ಸಂಪೂರ್ಣ ಮಾಹಿತಿ ಇಲ್ಲ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು. ಪ್ರಕರಣದಲ್ಲಿ ಮಧ್ಯವರ್ತಿಯ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕರ ಪಾತ್ರದ ಬಗ್ಗೆ ಪ್ರಶ್ನೆಗಳಿದ್ದು, ಈ ಕುರಿತು ಬಿಜೆಪಿ ಸ್ಪಷ್ಟನೆ ನೀಡಬೇಕು ಎಂದು ಆಗ್ರಹಿಸಿದರು.
ತಮ್ಮ ವಿರುದ್ಧ ಯಾವುದೇ ತಪ್ಪಿನ ದಾಖಲೆಗಳಿದ್ದರೆ ವಿಧಾನಮಂಡಲದಲ್ಲಿ ಚರ್ಚಿಸಲಿ ಎಂದು ಸವಾಲು ಹಾಕಿದ ಅವರು, ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರ ನೇಮಕದ ಕುರಿತು ಬಿಜೆಪಿ–ಜೆಡಿಎಸ್ ನಾಯಕರು ಏಕೆ ಮೌನವಾಗಿದ್ದಾರೆ ಎಂದು ಪ್ರಶ್ನಿಸಿದರು.
ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ತಮ್ಮ ವಿರುದ್ಧ ಆರೋಪ ಮಾಡುವ ಬದಲು ಪ್ರಕರಣದ ಮೂಲ ವಿಚಾರಗಳ ಬಗ್ಗೆ ಮಾತನಾಡಬೇಕು ಎಂದರು. ಆರ್. ಅಶೋಕ, ಬಿ.ವೈ. ವಿಜಯೇಂದ್ರ ಹಾಗೂ ಛಲವಾದಿ ನಾರಾಯಣಸ್ವಾಮಿ ಅವರು ತಮ್ಮ ವಿರುದ್ಧ ದಾಖಲೆಗಳಿದ್ದರೆ ಬಹಿರಂಗಪಡಿಸಲಿ, ಎಲ್ಲ ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧನಿದ್ದೇನೆ ಎಂದು ಹೇಳಿದರು.
ರಾಜ್ಯದಲ್ಲಿ ಸುಮಾರು ಒಂದು ಲಕ್ಷ ಪೊಲೀಸ್ ಸಿಬ್ಬಂದಿ ಸೇವೆ ಸಲ್ಲಿಸುತ್ತಿದ್ದು, ಕೆಲವೇ ಮಂದಿಯ ತಪ್ಪುಗಳಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರುತ್ತಿದೆ ಎಂದು ಖರ್ಗೆ ಹೇಳಿದರು. ಪೊಲೀಸ್ ಇಲಾಖೆಯನ್ನು ಇನ್ನಷ್ಟು ಜನಸ್ನೇಹಿಯಾಗಿಸಲು ಅಗತ್ಯ ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.
ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವ ವಿಚಾರದಲ್ಲಿಯೂ ಪ್ರತಿಕ್ರಿಯಿಸಿದ ಅವರು, ಕಾನೂನು ಉಲ್ಲಂಘಿಸಿದರೆ ಪ್ರಕರಣ ದಾಖಲಿಸುವುದು ಬೇರೆ ವಿಚಾರ. ಆದರೆ ಅನ್ಯಾಯದ ವಿರುದ್ಧ ಧ್ವನಿ ಎತ್ತುವವರ ವಿರುದ್ಧವೇ ಎಫ್ಐಆರ್ ದಾಖಲಿಸುವುದು ಸರಿಯೇ ಎಂದು ಪ್ರಶ್ನಿಸಿದರು.
ಆರ್ಎಸ್ಎಸ್ ಮತ್ತು ಬಿಜೆಪಿ ವಿರುದ್ಧ ಮಾತನಾಡುವವರ ವಿರುದ್ಧ ಪ್ರಕರಣ ದಾಖಲಿಸುವ ವಾತಾವರಣ ಕೇಂದ್ರ ಹಾಗೂ ಹಲವು ರಾಜ್ಯಗಳಲ್ಲಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು. ಝೀರೋ ಟ್ರಾಫಿಕ್ ಸೌಲಭ್ಯವನ್ನು ತಾವು ಕೇಳಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ಈ ವಿಚಾರದಲ್ಲಿ ಮಾಜಿ ಸಚಿವ ಬಿ.ಸಿ. ಪಾಟೀಲ್ ಅವರಿಗೆ ಏನು ಸಮಸ್ಯೆಯಾಗಿದೆ ಎಂದು ಪ್ರಶ್ನಿಸಿದರು.






















































































