
ಮಂಗಳೂರು: ಕೆಆರ್ಐಡಿಎಲ್ ಮಂಗಳೂರು ವಿಭಾಗದಲ್ಲಿ ಸಚಿವರ ಹೆಸರಿನಲ್ಲಿ ಶೇ.7ರಷ್ಟು ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂಬ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಅವರ ಆರೋಪಕ್ಕೆ ಸಂಬಂಧಿಸಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ.
ಆರೋಪದ ಸತ್ಯಾಸತ್ಯತೆ ಹಾಗೂ ಅಧಿಕಾರಿಗಳು ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆಯೇ ಎಂಬುದನ್ನು ಪರಿಶೀಲಿಸಲು ಸೂಪರ್ಟೆಂಡೆಂಟ್ ಇಂಜಿನಿಯರ್ ದರ್ಜೆಯ ಅಧಿಕಾರಿಯ ನೇತೃತ್ವದಲ್ಲಿ ತ್ರಿಸದಸ್ಯ ಸಮಿತಿ ರಚಿಸಲಾಗಿದೆ. ಸಮಿತಿಯು ಏಳು ದಿನಗಳೊಳಗೆ ವರದಿ ಸಲ್ಲಿಸುವಂತೆ ಸಚಿವರು ಸೂಚಿಸಿದ್ದಾರೆ.
ಸಚಿವರು ಅಥವಾ ಇಲಾಖೆಯ ಸಚಿವರ ಹೆಸರಿನಲ್ಲಿ ಯಾವುದೇ ಸಿಬ್ಬಂದಿ ಅಥವಾ ಅಧಿಕಾರಿಗಳು ಹಣ ವಸೂಲಿ ಮಾಡಿರುವುದು ದೃಢಪಟ್ಟರೆ ಅವರ ವಿರುದ್ಧ ಕಠಿಣ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಖಂಡ್ರೆ ಎಚ್ಚರಿಸಿದ್ದಾರೆ.
ಈ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕೆಆರ್ಐಡಿಎಲ್ ವ್ಯವಸ್ಥಾಪಕ ನಿರ್ದೇಶಕರು, ಶೇ.7ರಷ್ಟು ಮೊತ್ತವನ್ನು ಕಮಿಷನ್ ರೂಪದಲ್ಲಿ ಪಡೆಯುತ್ತಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಪಿಡಬ್ಲ್ಯೂಡಿ ಎಸ್ಆರ್ ದರದಲ್ಲಿ ಗುತ್ತಿಗೆದಾರರಿಗೆ ನಿಗದಿಯಾಗಿರುವ ಶೇ.10ರ ಲಾಭಾಂಶದಲ್ಲಿ, ಗ್ರೂಪ್ ಲೀಡರ್ಗಳ ಮೂಲಕ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ಶೇ.7ರಷ್ಟನ್ನು ‘ಜಾಬ್ ಸೇವಿಂಗ್ಸ್’ ಹೆಸರಿನಲ್ಲಿ ನಿಗಮದ ಖಾತೆಗೆ ಜಮಾ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಇದರೊಂದಿಗೆ ಕಾಮಗಾರಿಗಳ ಅಂದಾಜು ವೆಚ್ಚದ ಮೇಲೆ ಶೇ.3ರಷ್ಟು ಸೇವಾ ಶುಲ್ಕವನ್ನು ನಿಗಮ ಪಡೆಯುತ್ತದೆ. ಜಾಬ್ ಸೇವಿಂಗ್ಸ್ ಹಾಗೂ ಸೇವಾ ಶುಲ್ಕದ ಹಣದಿಂದ ಕೆಆರ್ಐಡಿಎಲ್ನ ಸುಮಾರು 1,800 ಖಾಯಂ ಮತ್ತು ಹೊರಗುತ್ತಿಗೆ ಸಿಬ್ಬಂದಿಯ ವೇತನ ಹಾಗೂ ಆಡಳಿತಾತ್ಮಕ ವೆಚ್ಚಗಳನ್ನು ಭರಿಸಲಾಗುತ್ತಿದೆ ಎಂದು ನಿಗಮ ತಿಳಿಸಿದೆ.






















































































