
ನವದೆಹಲಿ: ಶಿಕ್ಷಕರ ದಿನಾಚರಣೆ ಅಂಗವಾಗಿ ರಾಷ್ಟ್ರೀಯ ಶಿಕ್ಷಕರ ಪ್ರಶಸ್ತಿ ಪಡೆದ 82 ಶಿಕ್ಷಕರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದ ನಡೆಸಿದರು. ಈ ವೇಳೆ, ಶಿಕ್ಷಕರು ಪಾಠ ಮತ್ತು ಪರೀಕ್ಷಾ ಅಂಕಗಳಿಗಷ್ಟೇ ಸೀಮಿತವಾಗದೆ, ವಿದ್ಯಾರ್ಥಿಗಳ ಮಾನಸಿಕ ಬೆಳವಣಿಗೆ ಹಾಗೂ ನಡವಳಿಕೆಯ ಮೇಲೂ ಗಮನ ಹರಿಸಬೇಕು ಎಂದು ಹೇಳಿದರು.
ಮಕ್ಕಳ ವರ್ತನೆಯಲ್ಲಿ ಏಕಾಏಕಿ ಬದಲಾವಣೆ ಕಂಡುಬಂದರೆ ಅಥವಾ ಅವರು ಸ್ನೇಹಿತರಿಂದ ದೂರವಾಗುತ್ತಿದ್ದರೆ ಅದನ್ನು ನಿರ್ಲಕ್ಷಿಸಬಾರದು. ಮಾದಕ ವ್ಯಸನದಂತಹ ದುಶ್ಚಟಗಳ ಲಕ್ಷಣ ಕಂಡುಬಂದಲ್ಲಿ ಪೋಷಕರೊಂದಿಗೆ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿಕ್ಷಕರಿಗೆ ಸೂಚಿಸಿದರು.
ಮಕ್ಕಳಲ್ಲಿ ಹೆಚ್ಚುತ್ತಿರುವ ಸ್ಕ್ರೀನ್ ಸಮಯದ ಬಗ್ಗೆಯೂ ಮೋದಿ ಕಳವಳ ವ್ಯಕ್ತಪಡಿಸಿದರು. ಮೊಬೈಲ್ ಬಳಕೆಯನ್ನು ಕಡಿಮೆ ಮಾಡಲು ಕ್ರೀಡೆ ಹಾಗೂ ಸೃಜನಶೀಲ ಚಟುವಟಿಕೆಗಳಲ್ಲಿ ಮಕ್ಕಳನ್ನು ತೊಡಗಿಸಬೇಕು ಎಂದು ಸಲಹೆ ನೀಡಿದರು.
ಅವಿಭಕ್ತ ಕುಟುಂಬಗಳ ಸಂಖ್ಯೆ ಕಡಿಮೆಯಾಗುತ್ತಿರುವ ಸಂದರ್ಭದಲ್ಲಿ, ಮಕ್ಕಳ ಪ್ರತಿಭೆ ಗುರುತಿಸಿ ಅವರ ಮುಗ್ಧ ಬಾಲ್ಯವನ್ನು ಕಾಪಾಡುವಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ ಎಂದು ಪ್ರಧಾನಿ ಹೇಳಿದರು.




































