
ಗಂಗಾವತಿ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಗಂಗಾವತಿ ತಾಲೂಕಿನ ಕಲ್ಗುಡಿಯಲ್ಲಿ 6ನೇ ದಿನದ ಪಾದಯಾತ್ರೆಗೂ ಮುನ್ನ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸೂಟು-ಬೂಟು ಧರಿಸಿ ಹೆಲಿಕಾಪ್ಟರ್ನಲ್ಲಿ ಬಂದು ಬರಪೀಡಿತ ಪ್ರದೇಶಗಳನ್ನು ವೀಕ್ಷಿಸಿದ ಮಾತ್ರಕ್ಕೆ ಪ್ರಜಾ ಸೇವಕರಾಗಲು ಸಾಧ್ಯವಿಲ್ಲ. ರೈತರಿಗೆ ಪರಿಹಾರ, ಯುವಕರಿಗೆ ಉದ್ಯೋಗ ಹಾಗೂ ಬಡವರಿಗೆ ನೆರವು ನೀಡುವ ಮೂಲಕ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.
ಜನಪರ ಹಾಗೂ ಪರಿಣಾಮಕಾರಿ ಕಾರ್ಯಕ್ರಮಗಳನ್ನು ಜಾರಿಗೊಳಿಸಿದಾಗ ಮಾತ್ರ ನಿಜವಾದ ಪ್ರಜಾ ಸೇವೆ ಸಾಧ್ಯ. ಕೂಡ್ಲಗಿಯಲ್ಲಿ ಪ್ರಜಾ ಸೇವೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಿಎಂ ಡಿಕೆಶಿ, ತಮ್ಮನ್ನು ಪ್ರಜಾ ಸೇವಕ ಎಂದು ಕರೆದುಕೊಳ್ಳುತ್ತಿದ್ದಾರೆ. ಆದರೆ ಮೂರು ತಿಂಗಳ ಬಳಿಕ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಿದ್ದು, ಬಿಜೆಪಿ ಪಾದಯಾತ್ರೆ ಆರಂಭಿಸಿದ ನಂತರ ಎಚ್ಚೆತ್ತಿದ್ದಾರೆ ಎಂದು ಟೀಕಿಸಿದರು. ಬಿಡದಿ ಟೌನ್ಶಿಪ್ ಹಾಗೂ ಕನಕಪುರ ವಿಮಾನ ನಿಲ್ದಾಣದಂತಹ ಯೋಜನೆಗಳತ್ತ ಹೆಚ್ಚು ಆಸಕ್ತಿ ಹೊಂದಿರುವ ಸಿಎಂ ತಮ್ಮನ್ನು ಪ್ರಜಾ ಸೇವಕ ಎಂದು ಕರೆದುಕೊಳ್ಳುವುದು ಹಾಸ್ಯಾಸ್ಪದ ಎಂದರು.
ಬರಗಾಲದಿಂದ ರೈತರು ಸಂಕಷ್ಟದಲ್ಲಿದ್ದರೂ ಸರ್ಕಾರ ಸೂಕ್ತ ಪರಿಹಾರ ನೀಡಿಲ್ಲ. ಮುಖ್ಯಮಂತ್ರಿ ಹಾಗೂ ಸಚಿವರು ರೈತರ ಸಮಸ್ಯೆಗಳನ್ನು ಆಲಿಸಿಲ್ಲ. ಇಂತಹ ಆಡಳಿತವನ್ನು ಪ್ರಜಾ ಸೇವೆಯ ಸರ್ಕಾರ ಎಂದು ಹೇಗೆ ಕರೆಯಲು ಸಾಧ್ಯ ಎಂದು ಪ್ರಶ್ನಿಸಿದರು.
ಜಾಹೀರಾತಿನಿಂದ ಜನರಿಗೆ ಹತ್ತಿರವಾಗಲು ಸಾಧ್ಯವಿಲ್ಲ:
ಮುಂದಿನ ಅವಧಿಯಲ್ಲೂ ಮುಖ್ಯಮಂತ್ರಿಯಾಗಬೇಕೆಂಬ ಉದ್ದೇಶದಿಂದ ಡಿಕೆಶಿ ಪ್ರತಿದಿನ ಪತ್ರಿಕೆಗಳಲ್ಲಿ ಜಾಹೀರಾತು ನೀಡುತ್ತಿದ್ದಾರೆ. ಆದರೆ ಜಾಹೀರಾತಿನಿಂದ ಜನರಿಗೆ ಹತ್ತಿರವಾಗಲು ಸಾಧ್ಯವಿಲ್ಲ. ಬಡವರು, ಯುವಕರು ಮತ್ತು ಮಹಿಳೆಯರಿಗಾಗಿ ಉಪಯುಕ್ತ ಯೋಜನೆಗಳನ್ನು ಜಾರಿಗೊಳಿಸಿದಾಗ ಮಾತ್ರ ಜನರ ವಿಶ್ವಾಸ ಗಳಿಸಲು ಸಾಧ್ಯ ಎಂದು ಹೇಳಿದರು.
ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ಬಿಪಿಎಲ್ ಕಾರ್ಡ್ಗಳನ್ನು ಕಡಿತಗೊಳಿಸಲಾಗಿದ್ದು, ಬರಗಾಲದ ಸಂದರ್ಭದಲ್ಲೇ ಲಕ್ಷಾಂತರ ಕುಟುಂಬಗಳ ಕಾರ್ಡ್ಗಳು ರದ್ದಾಗಿವೆ ಎಂದು ಆರೋಪಿಸಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ವೈದ್ಯರು ಹಾಗೂ ಶಿಕ್ಷಕರ ಕೊರತೆ ಇದೆ. ಕುರಿಗಾಹಿಗಳ ಮಕ್ಕಳಿಗೆ ಶಿಕ್ಷಣ ಮತ್ತು ವೈದ್ಯಕೀಯ ಸೌಲಭ್ಯಗಳು ಸಮರ್ಪಕವಾಗಿ ದೊರೆಯುತ್ತಿಲ್ಲ. ಸರ್ಕಾರ ಅಗತ್ಯ ಮೂಲಸೌಕರ್ಯ ಒದಗಿಸುವ ಬದಲು ಜನೌಷಧಿ ಕೇಂದ್ರಗಳನ್ನೂ ಬಂದ್ ಮಾಡಿದೆ ಎಂದು ದೂರಿದರು.
2.5 ಲಕ್ಷ ಖಾಲಿ ಹುದ್ದೆ ಭರ್ತಿಗೆ ಆಗ್ರಹ:
ರಾಜ್ಯದಲ್ಲಿ ಸುಮಾರು 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿಯಿದ್ದು, ಅವುಗಳನ್ನು ತಕ್ಷಣ ಭರ್ತಿ ಮಾಡಿ ಯುವಕರಿಗೆ ಉದ್ಯೋಗದ ಅವಕಾಶ ಕಲ್ಪಿಸಬೇಕು. ಬಡವರ ಬಗ್ಗೆ ಕಾಳಜಿ ವಹಿಸಿ ಜನಪರ ಆಡಳಿತ ನೀಡಿದಾಗ ಮಾತ್ರ ಅದನ್ನು ಪ್ರಜಾ ಸೇವೆಯ ಸರ್ಕಾರ ಎಂದು ಕರೆಯಬಹುದು ಎಂದರು.
ಪ್ರಜೆಗಳಿಂದ, ಪ್ರಜೆಗಳಿಗಾಗಿ ಹಾಗೂ ಪ್ರಜೆಗಳ ಒಳಿತಿಗಾಗಿ ಆಡಳಿತ ನಡೆಯಬೇಕು. ಆದರೆ ಕಾಂಗ್ರೆಸ್ ಸರ್ಕಾರ ಭ್ರಷ್ಟರಿಂದ, ಭ್ರಷ್ಟರಿಗಾಗಿ ಮತ್ತು ಭ್ರಷ್ಟರಿಗೋಸ್ಕರ ಕೆಲಸ ಮಾಡುವ ಸರ್ಕಾರವಾಗಿದೆ ಎಂದು ಆರೋಪಿಸಿದರು.
ಈ ವೇಳೆ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ದೊಡ್ಡನಗೌಡ ಪಾಟೀಲ್, ಹೇಮಲತಾ ನಾಯಕ್, ಶಾಸಕ ಸುರೇಶ್, ಸಿದ್ದು ಸವದಿ, ಹೀರಪ್ಪ, ಪರಣ್ಣ ಮುನವಳ್ಳಿ, ಬಸವರಾಜ ದಡೆಸಗೂರು ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.




































