ಸರ್ಕಾರಿ ಶಾಲಾ ಮಕ್ಕಳಿಗೆ ಶೇ.7.5ರಷ್ಟು ಒಳಮೀಸಲಾತಿ

ಬೆಂಗಳೂರು: ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ಅವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಘೋಷಣೆ ಬೆನ್ನಲ್ಲೇ, ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಜಾರಿಯಲ್ಲಿದ್ದ ಶೇ.15ರ ಗ್ರಾಮೀಣ ಕೋಟಾವನ್ನು ತಲಾ ಶೇ.7.5ರಂತೆ ಎರಡು ವಿಭಾಗಗಳಾಗಿ ಹಂಚಿಕೆ ಮಾಡಿ ಉನ್ನತ ಶಿಕ್ಷಣ ಇಲಾಖೆ ಕರಡು ಅಧಿಸೂಚನೆ ಹೊರಡಿಸಿದೆ.
ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಪ್ರಜಾಸೇವಾ ಅಭಿಯಾನಕ್ಕೆ ಚಾಲನೆ ನೀಡಿದ್ದ ಸಿಎಂ ಡಿ.ಕೆ. ಶಿವಕುಮಾರ್, ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡಿದ ಮಕ್ಕಳಿಗೆ ಶೇ.7.5ರಷ್ಟು ಮೀಸಲಾತಿ ನೀಡುವುದಾಗಿ ಘೋಷಿಸಿದ್ದರು. ಇದರ ಬೆನ್ನಲ್ಲೇ ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ನಿಯಮಗಳು, 2006ರ ನಿಯಮ 9ಕ್ಕೆ ತಿದ್ದುಪಡಿ ತರಲು ಕರಡು ಪ್ರಕಟಿಸಲಾಗಿದೆ.
ಕರಡು ನಿಯಮದ ಪ್ರಕಾರ, ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಪ್ರಮುಖ ವೃತ್ತಿಪರ ಕೋರ್ಸ್ಗಳ ಸರ್ಕಾರಿ ಸೀಟುಗಳ ಪ್ರವೇಶಕ್ಕೆ ಗ್ರಾಮೀಣ ಕೋಟಾವನ್ನು ಎರಡು ಭಾಗಗಳಾಗಿ ವಿಂಗಡಿಸಲಾಗಿದೆ.
ಶೇ.7.5ರ ಒಳಮೀಸಲಾತಿ: ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜುಗಳಲ್ಲಿ 1ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡಿದ ಅರ್ಹ ವಿದ್ಯಾರ್ಥಿಗಳಿಗೆ ಈ ಮೀಸಲಾತಿ ಅನ್ವಯವಾಗಲಿದೆ.
ಮತ್ತೊಂದು ಶೇ.7.5ರ ಮೀಸಲಾತಿ: ಗ್ರಾಮೀಣ ಪ್ರದೇಶದಲ್ಲಿರುವ ಖಾಸಗಿ, ಅನುದಾನಿತ ಸೇರಿದಂತೆ ಇತರ ಮಾನ್ಯತೆ ಪಡೆದ ಶಿಕ್ಷಣ ಸಂಸ್ಥೆಗಳಲ್ಲಿ 1ರಿಂದ 10ನೇ ತರಗತಿವರೆಗೆ ಓದಿದ ವಿದ್ಯಾರ್ಥಿಗಳಿಗೆ ಈ ಕೋಟಾ ಲಭ್ಯವಾಗಲಿದೆ.
ಕರಡು ನಿಯಮಗಳ ಕುರಿತು ಸಾರ್ವಜನಿಕರು ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು 15 ದಿನಗಳ ಕಾಲಾವಕಾಶ ನೀಡಲಾಗಿದೆ. ಬಳಿಕ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ನಿಯಮಗಳನ್ನು ರಾಜ್ಯ ಗೆಜೆಟ್ನಲ್ಲಿ ಪ್ರಕಟಿಸಲಾಗುತ್ತದೆ.
ಈ ಕ್ರಮದಿಂದ ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಓದಿದ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವೃತ್ತಿಪರ ಕೋರ್ಸ್ಗಳ ಪ್ರವೇಶದಲ್ಲಿ ಹೆಚ್ಚಿನ ಅವಕಾಶ ದೊರೆಯುವ ನಿರೀಕ್ಷೆಯಿದೆ.




































