
ಬೆಂಗಳೂರು: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಸರ್ಕಾರಿ ಕಾರ್ಯಕ್ರಮಗಳು ಹಾಗೂ ಸಮಾರಂಭಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ಆದೇಶಿಸಿದೆ. ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಿ ಅಥವಾ ರಾಜ್ಯಪಾಲರು ಭಾಗವಹಿಸುವ ಕಾರ್ಯಕ್ರಮಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ.
ರಾಜ್ಯದಲ್ಲಿ ವಂದೇ ಮಾತರಂ ನುಡಿಸುವುದು ಅಥವಾ ಹಾಡುವ ಕುರಿತು ರಾಜ್ಯ ಸಚಿವ ಸಂಪುಟ ಕೈಗೊಂಡ ನಿರ್ಧಾರದ ಹಿನ್ನೆಲೆಯಲ್ಲಿ ಈ ಆದೇಶ ಹೊರಬಿದ್ದಿದೆ.
ಜನವರಿಯಲ್ಲಿ ಕೇಂದ್ರ ಗೃಹ ಸಚಿವಾಲಯವು ವಂದೇ ಮಾತರಂನ ಎಲ್ಲಾ ಆರು ಚರಣಗಳನ್ನು ರಾಷ್ಟ್ರಗೀತೆಗಿಂತ ಮೊದಲು ಹಾಡುವಂತೆ ಮಾರ್ಗಸೂಚಿ ನೀಡಿತ್ತು. ವಂದೇ ಮಾತರಂನ 150ನೇ ವರ್ಷಾಚರಣೆ ಹಿನ್ನೆಲೆಯಲ್ಲಿ ಈ ನಿರ್ದೇಶನ ಹೊರಡಿಸಲಾಗಿತ್ತು.
ಇದಕ್ಕೂ ಮುನ್ನ ಆಗಸ್ಟ್ 19ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು 1937ರ ನಿರ್ಣಯವನ್ನು ಪಾಲಿಸಲು ತೀರ್ಮಾನಿಸಿತ್ತು. ಅದರಂತೆ ಪಕ್ಷದ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ಮಾತ್ರ ಹಾಡಲಾಗುತ್ತದೆ.
ಕಾಂಗ್ರೆಸ್ ಪಕ್ಷವು ವಂದೇ ಮಾತರಂನ ಪೂರ್ಣ ಆವೃತ್ತಿಯನ್ನು ಹಾಡದೆ ಅವಮಾನಿಸಿದೆ ಎಂದು ಬಿಜೆಪಿ ಆರೋಪಿಸಿದ ಬೆನ್ನಲ್ಲೇ ಈ ವಿಚಾರ ಚರ್ಚೆಗೆ ಬಂದಿತ್ತು.
ಭಾರತೀಯ ರಾಷ್ಟ್ರೀಯ ಚಳವಳಿಯಲ್ಲಿ ವಂದೇ ಮಾತರಂ ರಾಷ್ಟ್ರೀಯತೆ, ಏಕತೆ ಮತ್ತು ದೇಶಭಕ್ತಿ ಬೆಳೆಸುವಲ್ಲಿ ಪ್ರಮುಖ ಪಾತ್ರ ವಹಿಸಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಸರ್ಕಾರಿ ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುವ ಅಥವಾ ನುಡಿಸುವ ಸಂದರ್ಭದಲ್ಲಿ ಏಕರೂಪತೆ ಮತ್ತು ಸೂಕ್ತ ಶಿಷ್ಟಾಚಾರ ಪಾಲಿಸುವುದು ಹೊಸ ಮಾರ್ಗಸೂಚಿಗಳ ಉದ್ದೇಶವಾಗಿದೆ ಎಂದು ಸರ್ಕಾರ ಹೇಳಿದೆ.




































