
ಹೆಬ್ರಿ: ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರಲ್ಲಿ ವ್ಯಕ್ತವಾಗಿರುವ ಆತಂಕ ಮತ್ತು ಆಕ್ಷೇಪಣೆಗಳ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೆ.18ರಂದು ಹೆಬ್ರಿಗೆ ಭೇಟಿ ನೀಡಲಿದ್ದಾರೆ.
ಮಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಮಧ್ಯಾಹ್ನ 3 ಗಂಟೆಗೆ ಹೆಬ್ರಿ ಹೆಲಿಪ್ಯಾಡ್ಗೆ ಆಗಮಿಸಲಿರುವ ಸಿಎಂ, ಕಸ್ತೂರಿರಂಗನ್ ವರದಿ ಕುರಿತು ನಡೆಯುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ವರದಿಯ 7ನೇ ಕರಡು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಸದ್ಯ ಸಾರ್ವಜನಿಕರಿಂದ ಅಭಿಪ್ರಾಯ ಹಾಗೂ ಆಕ್ಷೇಪಣೆಗಳನ್ನು ಸಂಗ್ರಹಿಸಲಾಗುತ್ತಿದೆ. ಜನವಸತಿ ಪ್ರದೇಶಗಳನ್ನು ವರದಿ ವ್ಯಾಪ್ತಿಯಿಂದ ಹೊರಗಿಡಬೇಕು ಎಂಬ ಒತ್ತಾಯವೂ ಕೇಳಿಬಂದಿದ್ದು, ಈ ಕುರಿತು ಹೆಬ್ರಿ ಭಾಗದ ರೈತರು ಹಾಗೂ ಸ್ಥಳೀಯರೊಂದಿಗೆ ಸಿಎಂ ಚರ್ಚೆ ನಡೆಸುವ ಸಾಧ್ಯತೆ ಇದೆ.
ಕಸ್ತೂರಿರಂಗನ್ ವರದಿಯಿಂದ ಕಾರ್ಕಳ, ಹೆಬ್ರಿ, ಕುಂದಾಪುರ, ಬೈಂದೂರು, ಬೆಳ್ತಂಗಡಿ, ಸುಳ್ಯ ಹಾಗೂ ಪುತ್ತೂರು ಸೇರಿದಂತೆ ಪಶ್ಚಿಮಘಟ್ಟದ ಹಲವು ಗ್ರಾಮಗಳ ಜನರಲ್ಲಿ ಆತಂಕ ಮೂಡಿದೆ. ಕೃಷಿ ಹಾಗೂ ಸ್ಥಳೀಯರ ಬದುಕಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂಬ ಬೇಡಿಕೆಯೂ ಮುನ್ನೆಲೆಗೆ ಬಂದಿದೆ. ಈ ವಿಚಾರ ವಿಧಾನ ಪರಿಷತ್ನಲ್ಲಿಯೂ ಚರ್ಚೆಗೆ ಬಂದಿತ್ತು.
7ನೇ ಕರಡು ಕುರಿತು ಸರ್ಕಾರದ ಮಟ್ಟದಲ್ಲಿ ಮುಂದಿನ ಕ್ರಮಗಳ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಸಿಎಂ ಅವರ ಹೆಬ್ರಿ ಭೇಟಿ ಮಹತ್ವ ಪಡೆದುಕೊಂಡಿದೆ. ಸಭೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳು, ರೈತರು ಹಾಗೂ ಸಾರ್ವಜನಿಕರ ಅಭಿಪ್ರಾಯಗಳನ್ನು ಆಲಿಸುವ ನಿರೀಕ್ಷೆಯಿದೆ.
ಸೆ.18ರಂದು ಬೆಳಗ್ಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆಯಲ್ಲಿ ಭಾಗವಹಿಸಲಿರುವ ಡಿ.ಕೆ. ಶಿವಕುಮಾರ್, ಮಧ್ಯಾಹ್ನ 2.30ಕ್ಕೆ ಮೇರಿಹಿಲ್ಸ್ ಹೆಲಿಪ್ಯಾಡ್ನಿಂದ ಹೆಬ್ರಿಗೆ ತೆರಳಲಿದ್ದಾರೆ. ಸಂಜೆ 5 ಗಂಟೆಗೆ ಹೆಬ್ರಿಯಿಂದ ಮಂಗಳೂರಿಗೆ ವಾಪಸಾಗಲಿದ್ದಾರೆ.




































