
ಬೆಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಹೆಚ್ಚುವರಿ ಭಾಷೆಯ ಸ್ಥಾನಮಾನ ನೀಡುವ ಕುರಿತು ರಾಜ್ಯ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. ಸಂವಿಧಾನಾತ್ಮಕ ಚೌಕಟ್ಟಿನೊಳಗೆ ಅಗತ್ಯ ಕ್ರಮ ಕೈಗೊಳ್ಳಲು ಪ್ರಯತ್ನಿಸಲಾಗುತ್ತಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ಎಸ್. ತಂಗಡಗಿ ತಿಳಿಸಿದ್ದಾರೆ.
ತುಳು ಭಾಷೆಯ ಇತಿಹಾಸ, ಸಾಹಿತ್ಯ, ಲಿಪಿ, ಸಂಸ್ಕೃತಿ ಹಾಗೂ ಶಾಸನಗಳ ಕುರಿತು ಅಧ್ಯಯನ ನಡೆಸಲು ಡಾ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ರಚಿಸಿದ್ದ ಸಮಿತಿ 2023ರ ಫೆಬ್ರುವರಿ 14ರಂದು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ಇದರ ಮುಂದುವರಿದ ಭಾಗವಾಗಿ, ವಿವಿಧ ರಾಜ್ಯಗಳ ಹೆಚ್ಚುವರಿ ಅಥವಾ ಎರಡನೇ ಅಧಿಕೃತ ಭಾಷಾ ವ್ಯವಸ್ಥೆ ಅಧ್ಯಯನಕ್ಕೆ 2025ರ ಜುಲೈ 30ರಂದು ಮತ್ತೊಂದು ತಂಡ ರಚಿಸಲಾಗಿತ್ತು.
ಅಧ್ಯಯನ ತಂಡವು 2026ರ ಜನವರಿ 19 ಮತ್ತು 20ರಂದು ಆಂಧ್ರಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಅಧಿಕೃತ ಭಾಷಾ ವ್ಯವಸ್ಥೆ, ಕಾನೂನು ಚೌಕಟ್ಟು ಹಾಗೂ ಅನುಷ್ಠಾನ ಮಾದರಿಯನ್ನು ಪರಿಶೀಲಿಸಿತ್ತು. ಈ ಕುರಿತು ಮಾರ್ಚ್ 2026ರಲ್ಲಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ತಂಗಡಗಿ ಹೇಳಿದ್ದಾರೆ.
‘ತುಳು ನಮ್ಮ ಕರಾವಳಿಯ ಭಾಷೆಯಾಗಿದ್ದು, ಕರ್ನಾಟಕದ ಶ್ರೀಮಂತ ಭಾಷಾ-ಸಾಂಸ್ಕೃತಿಕ ಪರಂಪರೆಯ ಭಾಗವಾಗಿದೆ. ತುಳು ಭಾಷೆಯ ಸಂರಕ್ಷಣೆ, ಅಭಿವೃದ್ಧಿ ಹಾಗೂ ಗೌರವಕ್ಕೆ ಸರ್ಕಾರ ಬದ್ಧವಾಗಿದೆ’ ಎಂದು ಅವರು ತಿಳಿಸಿದ್ದಾರೆ. ‘ಯಾನ್ ಏಪಲಾ ಜನಕ್ಲೆನ ಭಾವನೆಲೆನ ಒಟ್ಟುಗು ಇಪ್ಪುವೆ’ ಎಂದೂ ಸಚಿವರು ಹೇಳಿದ್ದಾರೆ.
ತಂಗಡಗಿ ಅವರ ಹೇಳಿಕೆಗೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಹುತೇಕರು ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ‘ಜೈ ತುಳುನಾಡ್’, ‘ಸೊಲ್ಮೆಲು’ ಸೇರಿದಂತೆ ಹಲವು ಪ್ರತಿಕ್ರಿಯೆಗಳು ಬಂದಿದ್ದು, ಶೀಘ್ರದಲ್ಲೇ ತುಳುವಿಗೆ ಅಧಿಕೃತ ಮಾನ್ಯತೆ ಸಿಗುವ ನಿರೀಕ್ಷೆ ವ್ಯಕ್ತವಾಗಿದೆ.
ಇದೇ ವೇಳೆ, ಕೆಲವರು ಸರ್ಕಾರದ ಭರವಸೆ ಈಡೇರುವ ಬಗ್ಗೆ ಅನುಮಾನವನ್ನೂ ವ್ಯಕ್ತಪಡಿಸಿದ್ದಾರೆ. ಮತ್ತೊಂದೆಡೆ, ತುಳುವಿಗೆ ಸ್ಥಾನಮಾನ ನೀಡಿದರೆ ಮರಾಠಿ, ಕೊಂಕಣಿ ಸೇರಿದಂತೆ ರಾಜ್ಯದ ಇತರ ಭಾಷೆಗಳಿಗೂ ಇಂತಹ ಬೇಡಿಕೆಗಳು ಹೆಚ್ಚಾಗಬಹುದು ಎಂಬ ಅಭಿಪ್ರಾಯವೂ ಸಾಮಾಜಿಕ ಜಾಲತಾಣದಲ್ಲಿ ಕೇಳಿಬಂದಿದೆ.






























































































































