
ಬೆಂಗಳೂರು: ಇತ್ತೀಚೆಗೆ ಮಳೆ ಬರುತ್ತಿರುವಾಗ ಚಾಲಕರು ಕೊಡೆ ಹಿಡಿದುಕೊಂಡು ಬಸ್ ಚಾಲನೆ ಮಾಡಿದ ಕುರಿತಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ್ದು ಇದೀಗ ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಈ ಕುರಿತು ಸ್ಪಷ್ಟನೆ ನೀಡಿದ ಹುಬ್ಬಳ್ಳಿಯಲ್ಲಿರುವ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ಮನರಂಜನೆಗಾಗಿ ಚಾಲಕ ಕೊಡೆ ಹಿಡಿದು ಬಸ್ ಚಾಲನೆ ಮಾಡಿದ್ದಾರೆ ಎಂದು ತಿಳಿಸಿದ್ದಲ್ಲದೆ ಬಸ್ಸಿನಲ್ಲಿ ಛತ್ರಿ ಹಿಡಿದು ರೀಲ್ಸ್ ಮಾಡಿದ ಚಾಲಕ ಮತ್ತು ನಿರ್ವಾಹಕಿ ಸೇವೆಯಿಂದ ಅಮಾನತು ಮಾಡಿ ಆದೇಶಿಸಿದೆ.
ಸ್ಪಷ್ಟನೆಯಲ್ಲಿ ಉಲ್ಲೇಖಿಸಿದ ಅಂಶ:
ಧಾರವಾಡ ಘಟಕದ ಬೇಟಗೇರಿ-ಧಾರವಾಡ ಮಾರ್ಗದಲ್ಲಿ ಸಂಚರಿಸುವ ಬಸ್ನಲ್ಲಿ ಚಾಲಕರಾಗಿ ಹನುಮಂತಪ್ಪ ಅ ಕಿಲ್ಲೇದಾರ ಹಾಗೂ ನಿರ್ವಾಹಕರಾಗಿ ಅನಿತಾ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಮಳೆ ಬರುತ್ತಿದ್ದಾಗ ಸಂಜೆ ಬಸ್ಸಿನಲ್ಲಿ ಪ್ರಯಾಣಿಕರು ಇಲ್ಲದೇ ಇದ್ದಾಗ ಚಾಲಕರು ಮನೋರಂಜನೆಗಾಗಿ ನಿರ್ವಾಹಕರ ಬಳಿ ಇದ್ದ ಕೊಡೆಯನ್ನು ಪಡೆದು ಹಿಡಿದುಕೊಂಡು ಬಸ್ ಚಾಲನೆ ಮಾಡಿದ್ದಾರೆ. ಚಾಲನೆ ಮಾಡುತ್ತಿರುವ ದೃಶ್ಯವನ್ನು ನಿರ್ವಾಹಕಿ ಮೊಬೈಲಿನಲ್ಲಿ ಸೆರೆ ಹಿಡಿದಿದ್ದಾರೆ.
ಮಳೆ ಬರುತ್ತಿದ್ದಾಗ ಚಾಲಕರ ಮೇಲಿನ ಛಾವಣಿಯಾಗಲಿ ಪ್ರಯಾಣಿಕರು ಕುಳಿತುಕೊಳ್ಳುವ ಸ್ಥಳದ ಛಾವಣಿಯಿಂದ ಸೋರುತ್ತಿರಲಿಲ್ಲ.ವಾಹನದ ಛಾವಣಿ ಸೋರಿಕೆ ಬಗ್ಗೆ ಚಾಲಕ, ನಿರ್ವಾಹಕರ, ಪ್ರಯಾಣಿಕರ ಯಾವುದೇ ದೂರು ಸಹ ದಾಖಲಾಗಿಲ್ಲ. ವಾಹನವನ್ನು ವಿಭಾಗದ ತಾಂತ್ರಿಕ ಶಿಲ್ಪಿಗಳಿಂದ ಪರಿಶೀಲನೆ ಮಾಡಲಾಗಿದ್ದು ಮೇಲ್ಚಾವಣಿ ಸೋರುತ್ತಿಲ್ಲ ಎನ್ನುವುದನ್ನು ಖಚಿತಪಡಿಸಲಾಗಿದೆ.
ಈ ವಿಡಿಯೋದ ಬಗ್ಗೆ ಸಿಬ್ಬಂದಿಯಿಂದ ಸ್ಪಷ್ಟೀಕರಣ ಪಡೆಯಲಾಗಿದ್ದು ಇದು ಕೇವಲ ಮನೋರಂಜನೆಗಾಗಿ ಮಾಡಿದ ವಿಡಿಯೋ ಚಿತ್ರೀಕರಣವಾಗಿರುತ್ತದೆ ಎಂದು ಹೇಳಿಕೆ ನೀಡಿದ್ದಾರೆ.