
ನವದೆಹಲಿ: ಇಂದಿನಿಂದ ಆ.12ರವರೆಗೆ ಒಟ್ಟು 19 ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಆಡಳಿತಾರೂಢ ಎನ್ಡಿಎ ಮೈತ್ರಿಕೂಟ ಮತ್ತು ಹೊಸ ಶಕ್ತಿಯೊಂದಿಗೆ ಸನ್ನದ್ಧವಾಗಿರುವ ಇಂಡಿಯಾ ಮೈತ್ರಿಕೂಟದ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ನಿರೀಕ್ಷೆಯಿದೆ.
ಮುಂಗಾರು ಅಧಿವೇಶನದ ಮೊದಲ ದಿನವಾದ ಸೋಮವಾರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಆರ್ಥಿಕ ಸಮೀಕ್ಷಾ ವರದಿ ಮಂಡಿಸಲಿದ್ದು ನಾಳೆ ನಿರ್ಮಲಾ ತಮ್ಮ ದಾಖಲೆಯ ಸತತ 7ನೇ ಬಜೆಟ್ ಮಂಡನೆ ಮಾಡಲಿದ್ದಾರೆ.
ಈ ಅಧಿವೇಶನದ ವೇಳೆ ನೀಟ್, ನೆಟ್ ಸೇರಿದಂತೆ ವಿವಿಧ ಪರೀಕ್ಷಾ ಅಕ್ರಮ, ಐಎಎಸ್ ಅಧಿಕಾರಿಗಳ ನೇಮಕದ ಗೊಂದಲ, ಅಗ್ನಿವೀರ ಯೋಜನೆಯ ನ್ಯೂನತೆ, ಮಣಿಪುರ ಹಿಂಸಾಚಾರ, ಬೆಲೆ ಏರಿಕೆ, ಕಾಶ್ಮೀರದಲ್ಲಿ ಹೆಚ್ಚುತ್ತಿರುವ ಉಗ್ರ ದಾಳಿ, ಉತ್ತರಪ್ರದೇಶದ ನಾಮಫಲಕ ವಿವಾದ ಮುಂತಾದ ವಿಷಯಗಳನ್ನು ಮುಂದಿಟ್ಟುಕೊಂಡು ಕೇಂದ್ರ ಸರ್ಕಾರವನ್ನು ಹಣಿಯಲು ವಿಪಕ್ಷಗಳು ಸಜ್ಜಾಗಿದೆ.








