
ದಾವಣಗೆರೆ: ಗೃಹ ಸಚಿವ ಡಾ|ಜಿ.ಪರಮೇಶ್ವರ್ ಬೆಂಗಳೂರಿನಲ್ಲಿ ನಾಯಿ ಮಾಂಸ ತಂದು ಮೇಕೆ ಮಾಂಸ ಎಂದು ಮಾರಾಟ ಮಾಡಲಾಗುತ್ತಿದೆ ಎಂದು ಇತ್ತೀಚೆಗೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅನುಮಾನ ವ್ಯಕ್ತಪಡಿಸಿ ರೈಲು ನಿಲ್ದಾಣದಲ್ಲಿ ಗಲಾಟೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದು ರಾಜಸ್ಥಾನದಿಂದ ಬೆಂಗಳೂರಿಗೆ ರೈಲಿನ ಮೂಲಕ ಬಂದಿದ್ದು ನಾಯಿ ಮಾಂಸ ಅಲ್ಲ. ಅದು ಮೇಕೆ ಮಾಂಸವಾಗಿದೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ನಗರದಲ್ಲಿ ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಯೋಗಾಲಯದ ವರದಿ ಬಂದಿದ್ದು, ವರದಿ ಅನ್ವಯ ಅದು ಮೇಕೆ ಮಾಂಸ ಎಂಬುದು ದೃಢಪಟ್ಟಿದೆ. ರಾಜಸ್ಥಾನದಿಂದ ಪ್ರತಿ ವಾರ ಅಥವಾ 15 ದಿನಗಳಿಗೊಮ್ಮೆ ಮಾಂಸ ತಂದು ಬೆಂಗಳೂರಿನಲ್ಲಿ ಮಾರಾಟ ಮಾಡುವುದು ಅವರ ವೃತ್ತಿ. ಆದರೆ ಕೆಲವರು ಅನಾವಶ್ಯಕವಾಗಿ ನಾಯಿ ಮಾಂಸ ಎಂದು ಆಪಾದನೆ ಮಾಡಿದ್ದರು. ಈಗ ಪ್ರಯೋಗಾಲಯ ನೀಡಿದ ವರದಿಯ ಅನ್ವಯ ಅದು ಮೇಕೆ ಮಾಂಸ ಎಂಬುದು ಬಹಿರಂಗಗೊಂಡಿದೆ. ಅನವಶ್ಯಕವಾಗಿ ದುರುದ್ದೇಶದಿಂದ ಈ ರೀತಿ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.











