
ಚಿಕ್ಕಮಗಳೂರು: ಕಳೆದ ಹದಿನೈದು ಇಪ್ಪತ್ತು ದಿನಗಳಿಂದ ನಿರಂತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಶೃಂಗೇರಿ ಪಟ್ಟಣದ ಹೃದಯ ಭಾಗದಲ್ಲಿರುವ ಗೋರಿ ಗುಡ್ಡ ಕುಸಿತವಾಗಿದೆ. ಗುಡ್ಡದ ಮೇಲಿರುವ ಹಜರತ್ ಮೆಹಬೂಬ್ ಝಹೂರ್ ಷಾಹ ದರ್ಗಾ ಕೇಳ ಭಾಗದಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಈ ಹಿನ್ನೆಲೆಯಲ್ಲಿ ಇದೀಗ ದರ್ಗಾ ಕುಸಿದು ಮನೆಗಳ ಮೇಲೆ ಬಿಳುವ ಆತಂಕ ಸೃಷ್ಟಿಯಾಗಿದೆ.
ಇದಲ್ಲದೆ ಶೃಂಗೇರಿ ಶಾರದಾ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೆರೆ ಆತಂಕ ಶುರುವಾಗಿದ್ದು ಹೀಗಾಗಿ ನೆರೆ ಪೀಡಿತ ಪ್ರದೇಶಗಳಲ್ಲಿ ಅಂದರೆ ಶೃಂಗೇರಿ ದೇವಾಲಯದ ಗಾಂಧಿ ಮೈದಾನ, ಪ್ಯಾರಲ್ ರೋಡ್, ಪಾರ್ಕಿಂಗ್ ಸ್ಥಳ ಸೇರಿದಂತೆ ನದಿ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಸುರಿದ ಮಳೆಯಿಂದಾಗಿ ತುಂಗಾ ನದಿ ಅಪಾಯದ ಮಟ್ಟ ಮೀರಿ ಉಕ್ಕಿ ಹರಿಯುತ್ತಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ಶೃಂಗೇರಿ ದೇವಾಲಯ ಸುತ್ತಮುತ್ತಲಿನ ಪ್ರದೇಶ ಎರಡು ಭಾರಿ ಮುಳುಗಡೆಯಾಗಿತ್ತು. ಇದೀಗ ಮತ್ತೆ ಮಳೆ ಹೆಚ್ಚಾದಂತೆ ಏಕಾಏಕಿ ತುಂಗಾ ನದಿ ಒಳ ಹರಿವಿನಲ್ಲಿ ಹೆಚ್ಚಳವಾಗುವ ಸಾಧ್ಯತೆ ಇದೆ. ಹೀಗಾಗಿ ತುಂಗಾ ನದಿಯಿಂದ ನೆರೆ ಆತಂಕ ಭೀತಿ ಶುರುವಾಗಿದ್ದರಿಂದ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಗಾಂಧಿ ಮೈದಾನದಲ್ಲಿದ್ದ ಅಂಗಡಿ ಮುಂಗಟ್ಟುಗಳನ್ನ ತೆರೆಯದಂತೆ ಸೂಚನೆ ನೀಡಲಾಗಿದೆ. ಸ್ಥಳೀಯರು ,ಪ್ರವಾಸಿಗರು ಸೇರಿದಂತೆ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಅಲ್ಲದೇಅಲ್ಲದೇ ವಾಹನಗಳ ಪಾರ್ಕಿಂಗ್ ಮಾಡದಂತೆ ನಿರ್ಬಂಧ ಹೇರಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.


































