
ಬೆಂಗಳೂರು: ಹೈಕೋರ್ಟ್ ಮಹತ್ವದ ತೀರ್ಪೋಂದನ್ನು ಹೊರಡಿಸಿದ್ದು ಅದೇನೆಂದರೆ ಸಹಕಾರ ಸಂಘಗಳಲ್ಲಿ ನೌಕರರ ನೇಮಕಾತಿ, ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲು ಸಹಕಾರ ಸಂಘಗಳು ಹೊಂದಿದ್ದ ಅಧಿಕಾರ ಮೊಟಕುಗೊಳಿಸಿ ಕರ್ನಾಟಕ ಸಹಕಾರ ಸಂಘಗಳ ಕಾಯ್ದೆಯ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ ತಂದಿದ್ದ ತಿದ್ದುಪಡಿಯನ್ನು ಅಸಂವಿಧಾನಿಕವೆಂದು ಘೋಷಿಸಿ ಆದೇಶಿಸಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಉಪ್ಪಿನಂಗಡಿ ಸಹಕಾರ ಕೃಷಿ ಸಂಸ್ಥೆಯ ಹಾಲಿ ಅಧ್ಯಕ್ಷ ಕೆ.ವಿ. ಪ್ರಸಾದ್ ಸೇರಿದಂತೆ 50ಕ್ಕೂ ಹೆಚ್ಚು ಸಹಕಾರ ಸಂಘಗಳು ತಿದ್ದುಪಡಿ ನಿಯಮ ಪ್ರಶ್ನಿಸಿ ಸಲ್ಲಿಸಿದ್ದ ತಕರಾರು ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನಂತ ರಮಾನಾಥ ಹೆಗಡೆ ಅವರ ಪೀಠ ಈ ಆದೇಶ ನೀಡಿದೆ.
ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ-2023ರ ಸೆಕ್ಷನ್ 128ಎಗೆ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯು ಸಂವಿಧಾನದ ಪರಿಚ್ಛೇದ 19 (1)(ಸಿ) ಅಡಿಯಲ್ಲಿ ಎಲ್ಲ ನಾಗರಿಕರಿಗೆ ಕಲ್ಪಿಸಿರುವ ‘ಸಂಘಗಳು ಮತ್ತು ಒಕ್ಕೂಟಗಳು ಅಥವಾ ಸಹಕಾರ ಸಂಘಗಳನ್ನು ರಚಿಸುವ ಹಕ್ಕನ್ನು ಉಲ್ಲಂಘಿಸಿದೆ. ಆದ್ದರಿಂದ ತಿದ್ದುಪಡಿ ನಿಯಮ ಸಂವಿಧಾನಬಾಹಿರವಾಗಿದೆ ಎಂದು ತೀರ್ಪಿನಲ್ಲಿ ನ್ಯಾಯಪೀಠ ತಿಳಿಸಿದೆ.













