
ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಹೊಸ ಆದೇಶ ಹೊರಡಿಸಿದ್ದು ರಾಜ್ಯದ ಸರ್ಕಾರಿ ಶಾಲೆಗಳ ಶಿಕ್ಷಕರು ಹಾಗೂ ಶಿಕ್ಷಣ ಇಲಾಖೆಯ ಸಿಬ್ಬಂದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆಗೆ ಬದಲಾಗಿ ಕೃತಕ ಬುದ್ಧಿಮತ್ತೆ ಆಧಾರಿತ ಮೊಬೈಲ್ ಆಪ್ ಮೂಲಕ ಹಾಜರಾತಿ ದಾಖಲಿಸುವುದು ಕಡ್ಡಾಯ ಎಂದು ತಿಳಿಸಿದೆ.
ಈ ಕುರಿತು ರಾಜ್ಯ ಸರ್ಕಾರವು ಎಲ್ಲಾ ಇಲಾಖೆಗಳಿಗೂ ಕರ್ನಾಟಕ ಅಡ್ವಾನ್ಸ್ ಅಟೆಂಡೆನ್ಸ್ ಮ್ಯಾನೇಜ್ಮೆಂಟ್ ಸಿಸ್ಟಮ್ ಅನ್ನು ಜಾರಿಗೊಳಿಸಿದ್ದು ಇದರನ್ವಯ, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಬೋಧಕೇತರ ಸಿಬ್ಬಂದಿ ತಮ್ಮ ಮೊಬೈಲ್ನಲ್ಲಿ ‘ಕರ್ತವ್ಯ’ ಆಪ್ ಇನ್ಸ್ಟಾಲ್ ಮಾಡಿಕೊಂಡು ಹಾಜರಾತಿ ನೋಂದಾಯಿಸಬೇಕು.
ಈ ಆಪ್ ಮೂಲಕ ಸಿಬ್ಬಂದಿಯ ಹಾಜರಾತಿಯನ್ನು ಪರಿಣಾಮಕಾರಿಯಾಗಿ ಗಮನಿಸಲಾಗುತ್ತದೆ. ಪ್ರತಿದಿನ ಕೆಲಸಕ್ಕೆ ಬರುವಾಗ ಮತ್ತು ತೆರಳುವಾಗ ಎರಡು ಬಾರಿ ಹಾಜರಾತಿ ದಾಖಲಿಸುವುದು ಕಡ್ಡಾಯವಾಗಿದೆ. ಶಾಲೆಗಳ ಹೊರತಾಗಿ, ತರಬೇತಿ ಕಾರ್ಯಕ್ರಮಗಳು ಹಾಗೂ ಎಸ್ಎಸ್ಎಲ್ಸಿ ಮೌಲ್ಯಮಾಪನ ಕೇಂದ್ರಗಳಲ್ಲಿಯೂ ಇದೇ ಆಪ್ ಬಳಕೆ ಮಾಡುವಂತೆ ನಿರ್ದೇಶಿಸಲಾಗಿದೆ.



















