
ಬೆಂಗಳೂರು: ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ರಾಜ್ಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಮಹತ್ವದ ಕ್ರಮ ಕೈಗೊಂಡಿದೆ. ಹೋಟೆಲ್, ರೆಸ್ಟೋರೆಂಟ್ ಹಾಗೂ ಆಹಾರ ಸಂಸ್ಥೆಗಳಲ್ಲಿ ‘ಅನಲಾಗ್ ಪನ್ನೀರ್’ ಬಳಕೆಯನ್ನು ಒಂದು ವರ್ಷದ ಅವಧಿಗೆ ನಿಷೇಧಿಸಿ ಆದೇಶ ಹೊರಡಿಸಿದೆ.
ಅಸಲಿ ಪನ್ನೀರ್ ಅನ್ನು ಹಾಲು ಹಾಗೂ ಹಾಲಿನ ಉತ್ಪನ್ನಗಳಿಂದ ತಯಾರಿಸಲಾಗುತ್ತದೆ. ಆದರೆ, ಕಡಿಮೆ ವೆಚ್ಚದಲ್ಲಿ ತಯಾರಿಸಿ ಹೆಚ್ಚು ಲಾಭ ಗಳಿಸುವ ಉದ್ದೇಶದಿಂದ ಕೆಲವು ಕಡೆ ಸಸ್ಯಜನ್ಯ ಎಣ್ಣೆ, ಪಿಷ್ಟ ಹಾಗೂ ರಾಸಾಯನಿಕ ಬಳಸಿ ತಯಾರಿಸಿದ ಕೃತಕ ಪನ್ನೀರ್ ನೀಡುತ್ತಿರುವುದು ಪತ್ತೆಯಾಗಿದೆ.
ಕೃತಕ ಪನ್ನೀರ್ನಲ್ಲಿ ಬಳಸುವ ಕಳಪೆ ಕೊಬ್ಬು ಹಾಗೂ ರಾಸಾಯನಿಕಗಳು ಆರೋಗ್ಯಕ್ಕೆ ಹಾನಿಕಾರಕವಾಗಬಹುದು. ಹಾಲಿನ ಉತ್ಪನ್ನವಲ್ಲದ ವಸ್ತುವನ್ನು ‘ಪನ್ನೀರ್’ ಹೆಸರಿನಲ್ಲಿ ಮಾರಾಟ ಮಾಡುವುದು ಆಹಾರ ಸುರಕ್ಷತಾ ಕಾಯ್ದೆಯಡಿ ನಿಯಮಬಾಹಿರವಾಗಿದ್ದು ಇನ್ನು ಮುಂದೆ ಪನ್ನೀರ್ ತಯಾರಿಕೆಗೆ ಶುದ್ಧ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನೇ ಬಳಸಬೇಕು. ಹೋಟೆಲ್, ರೆಸ್ಟೋರೆಂಟ್ಗಳು ಅನಲಾಗ್ ಪನ್ನೀರ್ ಬಳಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯು ರಾಜ್ಯಾದ್ಯಂತ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದೆ.
ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ಇಲಾಖೆ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಹಾಗೂ ಡೈರಿಗಳ ಮೇಲೆ ವಿಶೇಷ ತಪಾಸಣೆ ಮತ್ತು ದಾಳಿ ನಡೆಸಲಿದ್ದು ತಪ್ಪಿತಸ್ಥರ ವಿರುದ್ಧ ಆಹಾರ ಸುರಕ್ಷತಾ ಕಾಯ್ದೆಯಡಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.



















































































