
ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಇದ್ದರೂ ವಿದ್ಯುತ್ ಪೂರೈಕೆಯಲ್ಲಿ ಕೊರತೆ ಅಥವಾ ವ್ಯತ್ಯಯ ಉಂಟಾಗದಂತೆ ಸರ್ಕಾರ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದ್ದಾರೆ.
ಭಾರತ್ ನವೀಕರಿಸಬಹುದಾದ ಇಂಧನ ಶೃಂಗಸಭೆ ಮತ್ತು ಪ್ರದರ್ಶನ-2026ರ ಬೆಂಗಳೂರು ರೋಡ್ಶೋ ಉದ್ಘಾಟಿಸಿ ಮಾತನಾಡಿದ ಅವರು, ಭವಿಷ್ಯದ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟುಕೊಂಡು ಸಮಗ್ರ ಯೋಜನೆ ರೂಪಿಸುವಂತೆ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದರು.
ಕಳೆದ ಬೇಸಿಗೆಯಲ್ಲಿ ವಿದ್ಯುತ್ ವಿನಿಮಯ ಒಪ್ಪಂದದಡಿ ಉತ್ತರ ಪ್ರದೇಶ, ಪಂಜಾಬ್ ಮತ್ತು ಹರಿಯಾಣದಿಂದ ಹೆಚ್ಚುವರಿ ವಿದ್ಯುತ್ ಖರೀದಿಸಲಾಗಿತ್ತು. ಅಗತ್ಯ ಬಿದ್ದರೆ ಮುಂದಿನ ದಿನಗಳಲ್ಲಿಯೂ ಇದೇ ಕ್ರಮ ಕೈಗೊಳ್ಳಲಾಗುವುದು. ಮುಕ್ತ ಮಾರುಕಟ್ಟೆಯಿಂದ ವಿದ್ಯುತ್ ಖರೀದಿಸಲು ಬೇಕಾದ ವೆಚ್ಚವನ್ನು ಸರ್ಕಾರ ಭರಿಸಲು ಸಿದ್ಧವಿದೆ ಎಂದು ಹೇಳಿದರು.
ಸಾಂಪ್ರದಾಯಿಕ ವಿದ್ಯುತ್ ಮೂಲಗಳ ಜೊತೆಗೆ ಸೌರ, ಪವನ, ಬ್ಯಾಟರಿ ಸಂಗ್ರಹಣೆ, ಪಂಪ್ಡ್ ಸ್ಟೋರೇಜ್, ಹಸಿರು ಜಲಜನಕ ಹಾಗೂ ವಿದ್ಯುತ್ ವಾಹನಗಳತ್ತ ರಾಜ್ಯ ಗಮನ ಹರಿಸುತ್ತಿದೆ. ವಿದ್ಯುತ್ ಮೂಲಸೌಕರ್ಯ ಬಲಪಡಿಸುವ ನಿಟ್ಟಿನಲ್ಲಿ ಪ್ರಸಕ್ತ ಹಣಕಾಸು ವರ್ಷದಲ್ಲಿ 12 ಉಪಕೇಂದ್ರಗಳನ್ನು ನಿರ್ಮಿಸಲಾಗುತ್ತಿದ್ದು, ಮುಂದಿನ ಮೂರು ವರ್ಷಗಳಲ್ಲಿ 400ಕ್ಕೂ ಹೆಚ್ಚು ಉಪಕೇಂದ್ರಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಎಂಎನ್ಆರ್ಇ ಕಾರ್ಯದರ್ಶಿ ಸಂತೋಷ್ ಕುಮಾರ್ ಸಾರಂಗಿ, ನವೀಕರಿಸಬಹುದಾದ ಇಂಧನ ಘಟಕಗಳನ್ನು 18ರಿಂದ 24 ತಿಂಗಳಲ್ಲಿ ಸ್ಥಾಪಿಸಬಹುದಾದರೂ, ಅವುಗಳಿಗೆ ಅಗತ್ಯವಾದ ಪ್ರಸರಣ ಮೂಲಸೌಕರ್ಯ ನಿರ್ಮಾಣಕ್ಕೆ 3ರಿಂದ 5 ವರ್ಷ ಬೇಕಾಗುತ್ತದೆ ಎಂದು ತಿಳಿಸಿದರು.
ವಿದ್ಯುತ್ ಗ್ರಿಡ್ ಸಂಪರ್ಕ, ಇಂಧನ ಸಂಗ್ರಹಣೆ ಮತ್ತು ಪ್ರಸರಣ ವ್ಯವಸ್ಥೆಯ ವಿಸ್ತರಣೆ ಸೇರಿದಂತೆ ಹಲವು ಅಂಶಗಳನ್ನು ಪರಿಗಣಿಸಬೇಕಿದೆ. 2031ರ ವೇಳೆಗೆ ಭಾರತಕ್ಕೆ ಸುಮಾರು 239 ಗಿಗಾವ್ಯಾಟ್-ಗಂಟೆ ಬ್ಯಾಟರಿ ಇಂಧನ ಸಂಗ್ರಹಣೆಯ ಅಗತ್ಯವಿದ್ದು, ಗರಿಷ್ಠ ಬೇಡಿಕೆಯ ಸಂದರ್ಭದಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಇದು ಪ್ರಮುಖವಾಗಲಿದೆ ಎಂದರು.
ಅನುಮತಿ ಸಿಗದಿದ್ದರೆ ಪಂಪ್ಡ್ ಸ್ಟೋರೇಜ್ ಯೋಜನೆ ಇಲ್ಲ: ಜಾರ್ಜ್
ಶಿವಮೊಗ್ಗದಲ್ಲಿ ಪ್ರಸ್ತಾಪಿಸಿರುವ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ವನ್ಯಜೀವಿ ಮಂಡಳಿ ಹಾಗೂ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಸೇರಿದಂತೆ ಸಂಬಂಧಿತ ಸಂಸ್ಥೆಗಳ ಅನುಮತಿ ಪಡೆದ ಬಳಿಕವೇ ಯೋಜನೆ ಜಾರಿಗೊಳಿಸಲಾಗುವುದು ಎಂದು ಕೆ.ಜೆ. ಜಾರ್ಜ್ ಸ್ಪಷ್ಟಪಡಿಸಿದರು.
ಅಗತ್ಯ ಅನುಮತಿಗಳು ದೊರೆಯದಿದ್ದರೆ ಯೋಜನೆಯನ್ನು ಅನುಷ್ಠಾನಗೊಳಿಸುವುದಿಲ್ಲ ಎಂದ ಅವರು, ಹಗಲಿನಲ್ಲಿ ಉತ್ಪಾದನೆಯಾಗುವ ವಿದ್ಯುತ್ ಸಂಗ್ರಹಿಸಿ ಗರಿಷ್ಠ ಬೇಡಿಕೆಯ ಸಮಯದಲ್ಲಿ ಬಳಸಲು ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ಜಾರಿಗೊಳಿಸುವ ಉದ್ದೇಶ ಸರ್ಕಾರಕ್ಕಿದೆ ಎಂದು ಹೇಳಿದರು.
ರಾಜ್ಯದ ಪ್ರಸ್ತುತ ವಿದ್ಯುತ್ ಬೇಡಿಕೆ ಸುಮಾರು 18,000 ಮೆಗಾವ್ಯಾಟ್ ಆಗಿದ್ದು, ಶೇ.70ರಷ್ಟು ಬೇಡಿಕೆಯನ್ನು ನವೀಕರಿಸಬಹುದಾದ ಇಂಧನ ಮೂಲಗಳಿಂದ ಪೂರೈಸಲಾಗುತ್ತಿದೆ. 21ನೇ ಶತಮಾನದ ಅಗತ್ಯಕ್ಕೆ ತಕ್ಕಂತೆ ಪಂಪ್ಡ್ ಸ್ಟೋರೇಜ್ ಯೋಜನೆಗಳ ಅನುಷ್ಠಾನದತ್ತ ಸರ್ಕಾರ ಮುಂದುವರಿಯಲಿದೆ ಎಂದು ತಿಳಿಸಿದರು.
ಗೃಹಜ್ಯೋತಿ ಪರಿಶೀಲನೆ ಕುರಿತು ಸ್ಪಷ್ಟನೆ
ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಪರಿಶೀಲನೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಯೋಜನೆಯ ಸೌಲಭ್ಯ ಬೇಡದವರು ಯಾವುದೇ ದಾಖಲೆ ಸಲ್ಲಿಸುವ ಅಗತ್ಯವಿಲ್ಲ ಎಂದರು. ಅರ್ಹ ಫಲಾನುಭವಿಗಳು ಯಾವುದೇ ಕಾರಣಕ್ಕೂ ಗೃಹಜ್ಯೋತಿ ಯೋಜನೆಯ ಸೌಲಭ್ಯದಿಂದ ವಂಚಿತರಾಗುವುದಿಲ್ಲ ಎಂದು ಭರವಸೆ ನೀಡಿದರು.




































