ವಿಡಿಯೋ, ಫೋಟೋ ಸಹಿತ ದೂರು ದಾಖಲಿಸಲು ಹೊಸ ವ್ಯವಸ್ಥೆ ರೂಪಿಸಲು ಸೂಚನೆ ನೀಡಿದ ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಗ್ರಾಮ ಪಂಚಾಯಿತಿ ಸೇವೆಗಳಿಗೆ ಸಂಬಂಧಿಸಿದ ದೂರುಗಳನ್ನು ಗ್ರಾಮೀಣರು ಸುಲಭವಾಗಿ ದಾಖಲಿಸಿ, ಅದರ ಸ್ಥಿತಿಗತಿ ತಿಳಿದುಕೊಳ್ಳಲು ಡ್ಯಾಶ್ಬೋರ್ಡ್ ಆಧರಿತ ಆನ್ಲೈನ್ ವ್ಯವಸ್ಥೆ ರೂಪಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದ್ದಾರೆ.
‘ಇ-ಸ್ವತ್ತು’, ತೆರಿಗೆ, ಕೆರೆ ಒತ್ತುವರಿ, ಜೆಜೆಎಂ, ಕುಡಿಯುವ ನೀರು, ನೈರ್ಮಲ್ಯ, ಗ್ರಾಮೀಣ ರಸ್ತೆ, ವಿಬಿಜಿ ರಾಮ್ ಜಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಜನರು ದೂರು ಸಲ್ಲಿಸಲು ಈ ವ್ಯವಸ್ಥೆ ಸಹಕಾರಿಯಾಗಲಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ರಾಜ್ಯದ ಸುಮಾರು ಅರ್ಧದಷ್ಟು ಜನಸಂಖ್ಯೆಯೊಂದಿಗೆ ನೇರ ಸಂಪರ್ಕ ಹೊಂದಿರುವುದರಿಂದ, ಜನರ ಕುಂದುಕೊರತೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ಇಲಾಖೆಯ ಜವಾಬ್ದಾರಿ ಎಂದು ಖಂಡ್ರೆ ತಿಳಿಸಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರದ ಯೋಜನೆಗಳಲ್ಲಿನ ಲೋಪ, ಕಾಮಗಾರಿಗಳ ಗುಣಮಟ್ಟದ ಕೊರತೆ, ಸೇವೆಗಳ ವಿಳಂಬ ಹಾಗೂ ಭ್ರಷ್ಟಾಚಾರದ ಕುರಿತು ದೂರುಗಳು ಬರುತ್ತಿದ್ದು, ಇವುಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.
ವಿಡಿಯೋ ಹಾಗೂ ಫೋಟೋ ಸಹಿತ ದೂರು ಸಲ್ಲಿಸಲು, ಕ್ರಮ ಕೈಗೊಳ್ಳುವ ಅಧಿಕಾರಿಯ ಹೆಸರು ಮತ್ತು ಸಂಪರ್ಕ ಮಾಹಿತಿ ಪಡೆಯಲು ಹಾಗೂ ದೂರಿನ ಪ್ರಗತಿ ತಿಳಿದುಕೊಳ್ಳಲು ಅನುಕೂಲವಾಗುವಂತೆ ಸರಳ ಆಪ್, ಡ್ಯಾಶ್ಬೋರ್ಡ್ ಮತ್ತು ವೆಬ್ಪೋರ್ಟಲ್ ಅಭಿವೃದ್ಧಿಪಡಿಸುವಂತೆ ಸಚಿವರು ಸೂಚಿಸಿದ್ದಾರೆ.






















































































