
ಬೆಂಗಳೂರು: ಜೂನ್ 4, 2025ರಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಸಂಭ್ರಮಾಚರಣೆಯ ವೇಳೆ ನಡೆದ ಕಾಲ್ತುಳಿತದ ಘಟನೆಗೆ ಸಂಬಂಧಿಸಿದ ವರದಿ ಬಹಿರಂಗಪಡಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದೆ.
ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಇರಿಸುವಂತೆ ಅಡ್ವೊಕೇಟ್ ಜನರಲ್ ಮನವಿ ಮಾಡಿದರೂ, ಅದನ್ನು ತಿರಸ್ಕರಿಸಿದ ನ್ಯಾಯಪೀಠವು ವರದಿ ಬಹಿರಂಗ ಮಾಡುವುದರಿಂದ ಪ್ರತಿವಾದಿಗಳ ಅಭಿಪ್ರಾಯವನ್ನೂ ತಿಳಿಯಬಹುದಾಗಿದೆ ಎಂದು ಕೋರ್ಟ್ ಹೇಳಿದೆ.
ಜು.11 ರಂದು ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣದ ಮ್ಯಾಜಿಸ್ಟ್ರೇಟ್ ತನಿಖಾ ವರದಿ ಸರ್ಕಾರಕ್ಕೆ ಸಲ್ಲಿಕೆಯಾಗಿತ್ತು. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ವರದಿ ಸಲ್ಲಿಸಿದ್ದರು. ವರದಿಯಲ್ಲಿ ಕಾಲ್ತುಳಿತಕ್ಕೆ ಆರ್ಸಿಬಿಯೇ ಕಾರಣ ಎಂದು ಉಲ್ಲೇಖಿಸಲಾಗಿದೆ. ಆರ್ಸಿಬಿ ಮ್ಯಾನೇಜ್ಮೆಂಟ್ ಪೊಲೀಸರ ಅನುಮತಿ ಪಡೆಯದೇ ಫ್ರೀ ಪಾಸ್ ಎಂದು ಘೋಷಿಸಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.






















































