
ವಿಜಯನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದರೆ ಸ್ಥಳದಲ್ಲೇ ಪರಿಹಾರ ನೀಡುವ ಹಾಗೂ ಉಳಿದ ಸಮಸ್ಯೆಗಳಿಗೆ ನಿಗದಿತ ಅವಧಿಯಲ್ಲಿ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಿದರು.
ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಲ್ಲಿ ನಾಗರಿಕ ಸಂಪರ್ಕ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ, ಸಂಬಂಧಪಟ್ಟ ಇಲಾಖೆಗಳಿಂದ ಪರಿಹಾರ ಒದಗಿಸುವ ಸಮಗ್ರ ವ್ಯವಸ್ಥೆಯೇ ‘ಪ್ರಜಾಸೇವಾ ಅಭಿಯಾನ’ವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಆಡಳಿತವನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಉದ್ದೇಶದಿಂದ ‘ಪ್ರಜಾಸೇವಾ ಇಲಾಖೆ’ ರಚಿಸಲಾಗಿದ್ದು, ಅದರ ಭಾಗವಾಗಿಯೇ ಈ ಅಭಿಯಾನ ಆರಂಭಿಸಲಾಗಿದೆ.
ಪ್ರತಿ ಶನಿವಾರ ಜನರೊಂದಿಗೆ ಸಭೆ
ರಾಜ್ಯದ ವಿವಿಧ ತಾಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪ್ರತಿ ಶನಿವಾರ ಸರದಿ ಆಧಾರದ ಮೇಲೆ ‘ಪ್ರಜಾಸೇವಾ ಅಭಿಯಾನ’ ಸಭೆಗಳನ್ನು ಆಯೋಜಿಸಲಾಗುತ್ತದೆ.
ಪ್ರತಿ ತಿಂಗಳ ಮೊದಲ ಹಾಗೂ ಮೂರನೇ ಶನಿವಾರ ತಾಲೂಕು ಕೇಂದ್ರಗಳಲ್ಲಿ ನಡೆಯುವ ಸಭೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಅಧ್ಯಕ್ಷತೆ ವಹಿಸಲಿದ್ದಾರೆ. ಎರಡನೇ ಮತ್ತು ನಾಲ್ಕನೇ ಶನಿವಾರ ತಾಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ನಡೆಯಲಿದ್ದು, ಸ್ಥಳೀಯ ಶಾಸಕರು ನೇತೃತ್ವ ವಹಿಸಲಿದ್ದಾರೆ.
15 ದಿನ ಮುಂಚಿತವಾಗಿ ಮಾಹಿತಿ
ಸಭೆಯ ದಿನಾಂಕ, ಸಮಯ ಮತ್ತು ಸ್ಥಳದ ಕುರಿತು ಜನರಿಗೆ ಕನಿಷ್ಠ 15 ದಿನಗಳ ಮೊದಲೇ ಮಾಹಿತಿ ನೀಡಲಾಗುತ್ತದೆ. ಮನೆ ಮನೆಗೆ ಕರಪತ್ರ ವಿತರಿಸುವ ಜೊತೆಗೆ, AI ಆಧಾರಿತ ಕಾಲ್ ಸೆಂಟರ್ ಮೂಲಕ ನಿವಾಸಿಗಳಿಗೆ ಕರೆ ಮಾಡಿ ಸಭೆಯ ಸಂಪೂರ್ಣ ವಿವರಗಳನ್ನು ತಿಳಿಸಲಾಗುತ್ತದೆ.
ಸರ್ಕಾರದ ವಿವಿಧ ಇಲಾಖೆಗಳ ಸೇವೆ ಹಾಗೂ ಯೋಜನೆಗಳಿಗೆ ಸಂಬಂಧಿಸಿದ ಸಮಸ್ಯೆಗಳ ಪರಿಹಾರಕ್ಕಾಗಿ ಜನರು ಕಚೇರಿಯಿಂದ ಕಚೇರಿಗೆ ಅಲೆಯುವುದನ್ನು ತಪ್ಪಿಸಲು ‘ಪ್ರಜಾಸೇವಾ ಇಲಾಖೆ’ ಅಡಿಯಲ್ಲಿ ಸಮಗ್ರ ಸಾರ್ವಜನಿಕ ಕುಂದುಕೊರತೆ ಪರಿಹಾರ ವ್ಯವಸ್ಥೆ (IPGRS) ಅಭಿವೃದ್ಧಿಪಡಿಸಲಾಗಿದೆ.
ಸಾರ್ವಜನಿಕರ ದೂರುಗಳ ತ್ವರಿತ ಪರಿಹಾರಕ್ಕಾಗಿ ಬಹುಮುಖ, ದತ್ತಾಂಶ ಆಧಾರಿತ ಹಾಗೂ ಕಾಗದರಹಿತ ಸಾಫ್ಟ್ವೇರ್ ವ್ಯವಸ್ಥೆಯನ್ನು ರೂಪಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.
1902ಕ್ಕೆ ಕರೆ ಮಾಡಿ ದೂರು ದಾಖಲಿಸಿ
ಸಾರ್ವಜನಿಕರು ತಮ್ಮ ಸಮಸ್ಯೆ ಹಾಗೂ ದೂರುಗಳನ್ನು 1902 ಸಹಾಯವಾಣಿಗೆ ಕರೆ ಮಾಡುವ ಮೂಲಕ ಅಥವಾ IPGRS ವೆಬ್ಸೈಟ್ ಮೂಲಕ ದಾಖಲಿಸಬಹುದು. ದೂರು ದಾಖಲಾದ ಬಳಿಕ ಸಂಬಂಧಪಟ್ಟ ಇಲಾಖೆಗೆ ಮಾಹಿತಿ ರವಾನಿಸಿ, ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




































