
ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಹಠಾತ್ ಪ್ರವಾಹಕ್ಕೆ ಈವರೆಗೆ 160 ಮಂದಿ ಮೃತಪಟ್ಟಿದ್ದಾರೆ. 157 ಮೃತದೇಹಗಳನ್ನು ಹೊರತೆಗೆಯಲಾಗಿದ್ದು, 750ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಹೀಗಾಗಿ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಪತ್ತೆಯಾದವರ ಪೈಕಿ 391 ಮಂದಿ ವಿದೇಶಿಯರಾಗಿದ್ದು, 142 ಮಂದಿ ಭಾರತೀಯರು ಎಂದು ತಿಳಿದುಬಂದಿದೆ. ಸದ್ಯ ನೇಪಾಳದಲ್ಲಿ ರಕ್ಷಣಾ ಕಾರ್ಯಾಚರಣೆ ತೀವ್ರಗೊಂಡಿದ್ದು, ಸಂತ್ರಸ್ತರಿಗೆ ಅಗತ್ಯ ನೆರವು ನೀಡುವುದಾಗಿ ಪ್ರಧಾನಿ ಬಲೇಂದ್ರ ಶಾ ಭರವಸೆ ನೀಡಿದ್ದಾರೆ.
ಟಿಬೆಟ್ನಲ್ಲಿ ಬುಧವಾರ ಬೆಳಗ್ಗೆ 8.37ರ ಸುಮಾರಿಗೆ ಸಂಭವಿಸಿದ ಭೂಕಂಪದ ಬಳಿಕ ಹಿಮನದಿ ಸ್ಫೋಟದಿಂದ ಪ್ರವಾಹ ಉಂಟಾಗಿದೆ ಎಂದು ವರದಿಯಾಗಿದೆ. ಭೋಟೆ ಕೋಶಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ರಸುವಾ ಮತ್ತು ಧಾಡಿಂಗ್ ಜಿಲ್ಲೆಗಳು ತೀವ್ರವಾಗಿ ಹಾನಿಗೊಳಗಾಗಿವೆ.
ಪ್ರವಾಹವು ನುವಾಕೋಟ್, ಚಿತಾವಾನ್, ಗೂರ್ಖಾ, ತನಹು ಮತ್ತು ನವಲ್ಪರಾಸಿ ಪೂರ್ವ ಸೇರಿದಂತೆ ಹಲವು ಜಿಲ್ಲೆಗಳಿಗೂ ವ್ಯಾಪಿಸಿದೆ. ಹಲವು ಗ್ರಾಮಗಳು ಮತ್ತು ಪಟ್ಟಣಗಳು ಜಲಾವೃತವಾಗಿದ್ದು, ಸೇತುವೆಗಳು ಹಾಗೂ ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ.
ಪ್ರವಾಹದಿಂದ ರಸುವಾಗಧಿ, ಸಂಜೆನ್ ಖೋಲಾ ಮತ್ತು ಅಪ್ಪರ್ ತ್ರಿಶೂಲಿ 3A ಸೇರಿದಂತೆ ಹಲವು ಜಲವಿದ್ಯುತ್ ಯೋಜನೆಗಳಿಗೂ ಹಾನಿಯಾಗಿದೆ. ನೇಪಾಳಿ ಸೇನೆ 12 ಹೆಲಿಕಾಪ್ಟರ್ಗಳನ್ನು ರಕ್ಷಣಾ ಮತ್ತು ಶೋಧ ಕಾರ್ಯಕ್ಕೆ ನಿಯೋಜಿಸಿದೆ.
ದುರಂತಕ್ಕೆ ಭಾರತವೂ ನೆರವಿನ ಹಸ್ತ ಚಾಚಿದೆ. ಅಗತ್ಯ ಔಷಧಿಗಳೊಂದಿಗೆ 10 ಟನ್ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ ಸಾಮಗ್ರಿಗಳನ್ನು ಭಾರತ ನೇಪಾಳಕ್ಕೆ ಕಳುಹಿಸಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಬಲೇಂದ್ರ ಶಾ ಅವರೊಂದಿಗೆ ಮಾತನಾಡಿ, ನೇಪಾಳಕ್ಕೆ ಸಾಧ್ಯವಿರುವ ಎಲ್ಲ ಮಾನವೀಯ ನೆರವು ನೀಡುವುದಾಗಿ ತಿಳಿಸಿದ್ದಾರೆ. ರಕ್ಷಣಾ ಮತ್ತು ಪರಿಹಾರ ಕಾರ್ಯಗಳಲ್ಲಿ ಭಾರತ-ನೇಪಾಳ ತಂಡಗಳು ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿವೆ.
ಕಠ್ಮಂಡುವಿನಲ್ಲಿರುವ ಭಾರತೀಯ ರಾಯಭಾರ ಕಚೇರಿ ಸಂತ್ರಸ್ತ ಭಾರತೀಯರಿಗಾಗಿ ತುರ್ತು ಸಹಾಯವಾಣಿ ಸಂಖ್ಯೆಗಳನ್ನೂ ಪ್ರಕಟಿಸಿದೆ. ಭಾರತೀಯ ನಾಗರಿಕರ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ನೇಪಾಳದ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿರುವುದಾಗಿ ರಾಯಭಾರ ಕಚೇರಿ ತಿಳಿಸಿದೆ.
ಇದೇ ವೇಳೆ, ನಾಪತ್ತೆಯಾದವರ ರಕ್ಷಣೆಗೆ ಎಲ್ಲ ಪ್ರಯತ್ನ ನಡೆಸುವಂತೆ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೂಚಿಸಿದ್ದಾರೆ. ಚೀನಾ 145 ಅಧಿಕಾರಿಗಳು ಮತ್ತು ಸೈನಿಕರನ್ನು ತುರ್ತು ಕಾರ್ಯಾಚರಣೆಗೆ ನಿಯೋಜಿಸಿದೆ. ಅಪಾಯದಲ್ಲಿರುವವರನ್ನು ಸ್ಥಳಾಂತರಿಸಿ, ಗಾಯಾಳುಗಳಿಗೆ ತ್ವರಿತ ಚಿಕಿತ್ಸೆ ನೀಡುವಂತೆ ಅವರು ಸೂಚಿಸಿದ್ದಾರೆ.





















































































