
ಬೆಂಗಳೂರು: ಸಚಿವ ಸ್ಥಾನ ಮತ್ತು ಅಧಿಕಾರದ ಆಸೆ ಇರುವವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹೋಗಲಿ. ಪಕ್ಷ ಸಂಘಟನೆ, ಹೋರಾಟ ಹಾಗೂ ಸೋನಿಯಾ ಗಾಂಧಿ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವವನ್ನು ಬಲಪಡಿಸಲು ಬಯಸುವವರು ನನ್ನೊಂದಿಗೆ ಬರಲಿ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಹೇಳಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪಕ್ಷದ ವರಿಷ್ಠರ ವಿಶ್ವಾಸದಿಂದ ಈ ಜವಾಬ್ದಾರಿ ಸಿಕ್ಕಿದ್ದು, ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ನಲ್ಲಿ ಕೆಲಸ ಮಾಡುತ್ತಿದ್ದೇನೆ. ನಾನು ಎಂದಿಗೂ ಹುದ್ದೆಗಾಗಿ ಬೇಡಿಕೆ ಇಟ್ಟಿಲ್ಲ, ಪಕ್ಷದ ಕಾರ್ಯಕರ್ತನಾಗಿ ಸೇವೆ ಮುಂದುವರಿಸುತ್ತೇನೆ ಎಂದು ತಿಳಿಸಿದರು.
2028ರ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ಚರ್ಚೆಗಳು ಕೇವಲ ವದಂತಿ ಎಂದು ಸ್ಪಷ್ಟಪಡಿಸಿದ ಅವರು, ಪಕ್ಷವನ್ನು ಮತ್ತಷ್ಟು ಬಲಪಡಿಸುವ ಜವಾಬ್ದಾರಿ ತಮ್ಮ ಮೇಲಿದೆ. ಸಿಎಎ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ವಿರುದ್ಧ ಹೋರಾಟ ನಡೆಸುವುದಾಗಿ ಹೇಳಿದರು.
ಗುಜರಾತ್ ಮಾದರಿಗಿಂತ ಕರ್ನಾಟಕ ಮಾದರಿಯ ಅಭಿವೃದ್ಧಿಯ ಬಗ್ಗೆ ಹೆಮ್ಮೆ ಇದೆ. ಸರ್ಕಾರ ಮತ್ತು ಪಕ್ಷದ ನಡುವೆ ಉತ್ತಮ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಾಗುವುದು ಎಂದು ಬಿ. ಕೆ. ಹರಿಪ್ರಸಾದ್ ಹೇಳಿದರು.
































