
ವೇಣೂರು: ಮೂಡುಬಿದಿರೆ ಇನ್ಸ್ಪೆಕ್ಟರ್ ಸಂದೇಶ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಮತ್ತೆ ತೀವ್ರತೆ ಪಡೆದಿದೆ. ಈಗ ಶಿಕ್ಷಕಿಯೊಬ್ಬರು ನೀಡಿದ ದೂರಿನ ಆಧಾರದಲ್ಲಿ ಹೊಸ ಎಫ್ಐಆರ್ ದಾಖಲಾಗಿದ್ದು, ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ.
ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ದೂರಿನಲ್ಲಿ, 2018ರಿಂದ 2023ರವರೆಗೆ ಸಂದೇಶ್ ತನ್ನ ಅಧಿಕಾರ ದುರುಪಯೋಗಪಡಿಸಿಕೊಂಡು ಬೆದರಿಕೆ ಹಾಕಿ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ ಎಂದು ಶಿಕ್ಷಕಿ ಆರೋಪಿಸಿದ್ದಾರೆ. ಜೀವಭಯ ಮತ್ತು ಕುಟುಂಬದ ಮೇಲಿನ ಒತ್ತಡದಿಂದ ಇಷ್ಟೊಂದು ವರ್ಷ ಮೌನವಾಗಿದ್ದೆ ಎಂದು ಅವರು ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಬಿಎನ್ಎಸ್ 376(2), 384 ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇದಕ್ಕೂ ಮೊದಲು ಕೂಡ ಸಂದೇಶ್ ವಿರುದ್ಧ ಮಹಿಳೆಯರು ಗಂಭೀರ ಆರೋಪಗಳನ್ನು ಮಾಡಿದ್ದರೂ, ಪ್ರಾಥಮಿಕ ತನಿಖೆಯಲ್ಲಿ ಅವು ಸುಳ್ಳು ಎಂದು ಹೇಳಲಾಗಿತ್ತು. ಇದೀಗ ಹೊಸ ದೂರು ಹೊರಬಂದಿರುವುದರಿಂದ ಪ್ರಕರಣ ಮತ್ತಷ್ಟು ಗಂಭೀರತೆ ಪಡೆದುಕೊಂಡಿದೆ.




























