ರಾಜಕೀಯದಲ್ಲಿ ಸಂಚಲನ ಮೂಡಿಸಿದ ಶಾಸಕ ವಿ.ಸುನಿಲ್ ಕುಮಾರ್ ಟ್ವೀಟ್

ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ನಾಳೆ ಉಡುಪಿ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದು, ಉಡುಪಿಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.
ಈ ವಿಚಾರವಾಗಿ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಡಿಸಿಎಂ ಡಿ.ಕೆ ಶಿವಕುಮಾರ್ ರವರಿಗೆ ವಿಭಿನ್ನವಾಗಿ ಸ್ವಾಗತ ಕೋರಿದ ಸಂದೇಶವೊಂದು ರಾಜಕೀಯ ವಲಯದಲ್ಲಿ ಭಾರಿ ಸುದ್ದಿ ಮಾಡಿದೆ.
ಡಿಸಿಎಂ ಡಿಕೆ ಶಿವಕುಮಾರ್ ನಾಳೆ ಮಾರ್ಚ್ 2ರಂದು ಉಡುಪಿ ಕಾಪು ಶ್ರೀ ಹಳೆ ಮಾರಿಗುಡಿ ಬ್ರಹ್ಮಕಲೋತ್ಸವ ಗದ್ದುಗೆ ಪ್ರತಿಷ್ಠೆಯಲ್ಲಿ ಭಾಗಿಯಾಗಲಿದ್ದು, ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದಾರೆ. ತದನಂತರ ಕಾರ್ಕಳದಲ್ಲಿ ನಡೆಯುವ ಕುಟುಂಬೋತ್ಸವ ಕಾರ್ಯಕ್ರಮಕ್ಕೆ ಭೇಟಿ ನೀಡಲಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ವಿ. ಸುನಿಲ್ ಕುಮಾರ್,” ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧಿಸಿದರೂ ಕುಂಭಮೇಳದಲ್ಲಿ ಮಿಂದ, ಈಶಾ ಫೌಂಡೇಶನ್ ಶಿವರಾತ್ರಿಯಲ್ಲಿ ನಿಂದ, ಹಿಂದೂವಾಗಿ ಹುಟ್ಟಿ ಹಿಂದುವಾಗಿಯೇ ಸಾಯುವೆ ಎಂದ, ಹಿಂದುತ್ವದೆಡೆಗೆ ಹೆಜ್ಜೆ ಹಾಕಲು ಮನಸ್ಸು ಮಾಡುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿಸಿಎಂ ಡಿ.ಕೆ ಶಿವಕುಮಾರ್ ರವರಿಗೆ ಗಂಡು ಮೆಟ್ಟಿನ ನೆಲ ಹಿಂದುತ್ವದ ಭದ್ರಕೋಟೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ಆತ್ಮೀಯ ಸ್ವಾಗತ. ನಿಮ್ಮ ಭೇಟಿ ಈ ಹಿಂದುತ್ವ ಹಾಗೂ ಅಭಿವೃದ್ಧಿಯ ದೃಷ್ಟಿಯಿಂದ ಫಲಪ್ರದವಾಗಲಿ” ಎಂದು ತಮ್ಮ ಸಾಮಾಜಿಕ ಮಾಧ್ಯಮ ಸಂದೇಶದಲ್ಲಿ ತಿಳಿಸಿದ್ದಾರೆ.
ಡಿ.ಕೆ ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗಳು ರಾಜಕೀಯದಲ್ಲಿ ಚರ್ಚೆಯ ವಿಷಯವಾಗಿದ್ದು, ಇದೀಗ ಶಾಸಕ ಸುನಿಲ್ ಕುಮಾರ್ ಟ್ವೀಟ್ ಪ್ರಶ್ನದಾಯಕವಾಗಿದೆ.






















































