ಇಂದು ಪ್ರಧಾನಿ ಯವರಿಂದ 5,500 ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

ಪ್ರಯಾಗ್ರಾಜ್: 12 ವರ್ಷಗಳಿಗೊಮ್ಮೆ ನಡೆಯುವ ಮಹಾ ಕುಂಭಮೇಳವು ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಆರಂಭವಾಗಲಿದ್ದು ಪ್ರಧಾನಿ ನರೇಂದ್ರ ಮೋದಿಯವರು ಮಹಾಕುಂಭ ಮೇಳದ ಧಾರ್ಮಿಕ ವಿಧಿ ವಿಧಾನಗಳನ್ನೂ ನೆರವೇರಿಸಲಿದ್ದಾರೆ.
ಇಂದು ಮಧ್ಯಾಹ್ನ 12.15ರ ಸುಮಾರಿಗೆ ಪ್ರಧಾನಿ ಆಮಿಸಲಿದ್ದು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳ ತ್ರೀವೇಣಿ ಸಂಗಮದಲ್ಲಿ ಪೂಜೆ ಸಲ್ಲಿಸಲಿದ್ದಾರೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಹ ಸಾಥ್ ನೀಡಲಿದ್ದು ಗುರುವಾರ ಪ್ರಯಾಗ್ರಾಜ್ಗೆ ಭೇಟಿ ನೀಡಿ, ಸಿದ್ಧತಾ ಕಾರ್ಯಗಳ ಪರಿಶೀಲನೆ ನಡೆಸಿದ್ದರು.
ಡಿಸೆಂಬರ್ 13ರಿಂದ ಫೆಬ್ರುವರಿ 26ರ ವರೆಗೆ ನಡೆಯುವ ಈ ಮಹಾ ಧಾರ್ಮಿಕ ಮಹೋತ್ಸವದಲ್ಲಿ ಸುಮಾರು 15 ಕೋಟಿ ಜನರು ಭಾಗವಹಿಸುವ ನಿರೀಕ್ಷೆಯಿದೆ. ಈ ಸಂಬಂಧ ರೈಲ್ವೆ ಇಲಾಖೆಯೂ ಪ್ರಯಾಣಿಕರ ಅನುಕೂಲಕ್ಕಾಗಿ ಒಟ್ಟು 13,000 ರೈಲುಗಳ ಸಂಚಾರ ನಡೆಸಲು ಸಿದ್ಧತೆ ಮಾಡಿಕೊಂಡಿದೆ.
ಈ ಕುರಿತು ಮಾಹಿತಿ ನೀಡಿದ ಉತ್ತರ ಮಧ್ಯ ರೈಲ್ವೆಯ ಮುಖ್ಯ ಜನ ಸಂಪರ್ಕ ಅಧಿಕಾರಿ ಶಶಿಕಾಂತ ತ್ರಿಪಾಠಿ ಮಹಾ ಕುಂಭಮೇಳದ ಅವಧಿಯಲ್ಲಿ ರೈಲ್ವೆ ಇಲಾಖೆಯು 10,000 ದೈನಂದಿನ ರೈಲುಗಳ ಜತೆಗೆ ಹೆಚ್ಚುವರಿಯಾಗಿ 3,000 ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರೈಲ್ವೆ ಇಲಾಖೆಯ 1,609 ಕೋಟಿ ರೂ. ಮೊತ್ತದ ವಿವಿಧ ಕಾಮಗಾರಿಗಳೂ ಸೇರಿದಂತೆ ಸುಮಾರು 5,500 ಕೋಟಿ ರೂ. ಮೊತ್ತದ ಹಲವು ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.





