
ಕಾರ್ಕಳ : ಕುಕ್ಕುಂದೂರು ಗ್ರಾಮದ ನಕ್ರೆ ಹಾಂಕ್ರಾಡಿ ಪ್ರದೇಶದಲ್ಲಿ ಯಾವುದೇ ಪರವಾನಿಗೆ ಪಡೆಯದೇ ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿಕೊಂಡು ಕಲ್ಲು ಬಂಡೆಗಳನ್ನು ಒಡೆಯಲಾಗುತ್ತಿದ್ದ ಪ್ರಕರಣವನ್ನು ಪತ್ತೆಹಚ್ಚಿರುವ ಕಾರ್ಕಳ ಪೊಲೀಸರು, ಈ ಸಂಬಂಧ ಇಬ್ಬರನ್ನು ಬಂಧಿಸಿದ್ದಾರೆ.
ಬಂಧಿತರನ್ನು ಅಯ್ಯಪ್ಪ ನಗರ ನಿವಾಸಿ ಟಿ. ರವಿಚಂದ್ರ (55) ಹಾಗೂ ಅವರ ಪುತ್ರ ಪವನ್ ಕುಮಾರ್ (31) ಎಂದು ಗುರುತಿಸಲಾಗಿದ್ದು ಆರೋಪಿಗಳು ಕಾನೂನುಬಾಹಿರವಾಗಿ ಯಾವುದೇ ಅನುಮತಿ ಇಲ್ಲದೇ ಸ್ಫೋಟಕಗಳನ್ನು ಬಳಸಿ ಕಲ್ಲುಗಳನ್ನು ಸ್ಫೋಟಿಸಿರುವುದಾಗಿ ತಿಳಿದುಬಂದಿದೆ. ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಜನವರಿ 21ರಂದು ಪ್ರಕರಣ ದಾಖಲಾಗಿದ್ದು, ನಂತರ ತನಿಖೆ ಕೈಗೊಂಡ ಠಾಣೆಯ ಪಿಎಸ್ಐ ಮುರುಳೀಧರ್ ನಾಯ್ಕ್ ನೇತೃತ್ವದ ತಂಡ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಪ್ರಕರಣವನ್ನು ಪರಿಶೀಲಿಸಿದ ನ್ಯಾಯಾಲಯವು ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.



















