
ಅಹಮದಾಬಾದ್: ಗುರುವಾರ ಮಧ್ಯಾಹ್ನ ಲಂಡನ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಪತನಗೊಂಡಿದ್ದು ಅಹಮದಾಬಾದ್ನ ಈ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಬೆಳಗ್ಗೆ ಭೇಟಿ ನೀಡಿ ಅಧಿಕಾರಿಗಳಿಂದ ವಿವರವಾದ ಮಾಹಿತಿ ಪಡೆದಿದ್ದಾರೆ.
ಅಹಮದಾಬಾದ್ ಸಿವಿಲ್ ಆಸ್ಪತ್ರೆಗೂ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ ದುರಂತದಲ್ಲಿ ಬದುಕುಳಿದಿದ್ದ ಏಕೈಕ ಪ್ರಯಾಣಿಕ ರಮೇಶ್ ಅವರಿಗೆ ಧೈರ್ಯ ಹೇಳಿ ಗಾಯಾಳುಗಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದರು.
ಈ ವೇಳೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕೂಡ ಪ್ರಧಾನಿ ಜೊತೆಗಿದ್ದು ಘಟನಾ ಸ್ಥಳವನ್ನು ತಲುಪಿದ ನಂತರ, ಪ್ರಧಾನಿ ಅಪಘಾತದ ಬಗ್ಗೆ ಮಾಹಿತಿ ಸಂಗ್ರಹಿಸಿದರು. ಸ್ಥಳವನ್ನು ಪರಿಶೀಲಿಸಿದ ನಂತರ, ಪ್ರಧಾನಿ ಮೋದಿ ಗಾಯಾಳುಗಳನ್ನು ಭೇಟಿ ಮಾಡಲು ಆಸ್ಪತ್ರೆಗೆ ತೆರಳಿದ್ದಾರೆ.
ಈ ಕುರಿತು ಮೋದಿ ಎಕ್ಸ್ನಲ್ಲಿ ಪೋಸ್ಟ್ ಮಾಡಿದ್ದು “ವಿನಾಶದ ದೃಶ್ಯವು ಹೃದಯವಿದ್ರಾವಕವಾಗಿದೆ. ದಣಿವರಿಯದೆ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಅಧಿಕಾರಿಗಳು ಮತ್ತು ತಂಡಗಳನ್ನು ಭೇಟಿ ಮಾಡಿದೆ. ಈ ಊಹಿಸಲಾಗದ ದುರಂತದಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡವರೊಂದಿಗೆ ನಾವಿದ್ದೇವೆ.
ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ಪತನ ದುರಂತದಿಂದ ನಾವೆಲ್ಲರೂ ದಿಗ್ಭ್ರಮೆಗೊಂಡಿದ್ದೇವೆ. ಹಠಾತ್ ಆಘಾತ ಮತ್ತು ಹಲವಾರು ಜೀವಗಳನ್ನು ಕಳೆದುಕೊಂಡಿರುವ ದುಃಖವನ್ನು ತಡೆಯಲಾಗುತ್ತಿಲ್ಲ. ಎಲ್ಲಾ ದುಃಖಿತ ಕುಟುಂಬಗಳಿಗೆ ಸಂತಾಪಗಳು. ಅವರ ನೋವಿನ ಜತೆಗೆ ನಾವಿದ್ದೇವೆ. ಅವರ ಕುಟುಂಬಗಳಲ್ಲಿ ಸೃಷ್ಟಿಯಾಗಿರುವ ನಿರ್ವಾತದ ನೋವು ವರ್ಷಗಳ ವರೆಗೆ ಇರಲಿದೆ ಎಂಬುದು ನಮಗೆ ತಿಳಿದಿದೆ. ಅವರ ಜತೆಗೆ ನಾವಿದ್ದೇವೆ. ಓಂ ಶಾಂತಿ” ಎಂದು ಮೋದಿ ಉಲ್ಲೇಖಿಸಿದ್ದಾರೆ.



















