
ಬೆಂಗಳೂರು : ಈಗಾಗಲೇ ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ ಪೂರ್ವ ಸಿದ್ಧತಾ ಪರೀಕ್ಷೆ 1ರ ಕೆಲ ಪ್ರಶ್ನೆ ಪತ್ರಿಕೆಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಎಚ್ಚೆತ್ತುಕೊಂಡ ಶಿಕ್ಷಣ ಇಲಾಖೆಯು ಜ.19ರಿಂದ ಆರಂಭವಾಗಲಿರುವ ಪೂರ್ವ ಸಿದ್ಧತಾ ಪರೀಕ್ಷೆ 2ರಲ್ಲಿ ಮತ್ತೆ ಇಂಥ ಲೋಪಗಳಾಗದಂತೆ ಹಲವು ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ.
- ನೋಡಲ್ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆ ಕೇಂದ್ರದ ಪ್ರಾಂಶುಪಾಲರ ಮೇಲೆ ಎಫ್ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು.
- ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆಗಳನ್ನು ವಾಟ್ಸ್ಅಪ್/ ಯೂಟ್ಯೂಬ್/ ಇನ್ಸ್ಟಾಗ್ರಾಂ ಅಥವಾ ಇನ್ಯಾವುದೇ ಮಾಧ್ಯಮದಲ್ಲಿ ಬಹಿರಂಗ, ಪ್ರಸಾರ ಮಾಡಿದಲ್ಲಿ ವಿದ್ಯಾರ್ಥಿಗಳ ಮೇಲೂ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಅನುದಾನಿತ ಕಾಲೇಜುಗಳು ಪ್ರಶ್ನೆ ಪತ್ರಿಕೆ ಬಹಿರಂಗಕ್ಕೆ ಕಾರಣವಾದರೆ ಕಾಲೇಜಿನ ಅನುದಾನ ಹಿಂಪಡೆಯಲು, ಪ್ರಶ್ನೆ ಪತ್ರಿಕೆ ಸೋರಿಕೆ ಪರೀಕ್ಷಾ ಕೇಂದ್ರದಲ್ಲಿ ನಡೆದರೆ ಅಂಥ ಕೇಂದ್ರವನ್ನೇ ರದ್ದುಮಾಡಲು ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು.
- ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಉಪನಿರ್ದೇಶಕರು(ಡಿಡಿಪಿಯು) ಒಂದೇ ಐಪಿ ವಿಳಾಸ ಮತ್ತು ಒಂದೇ ಗಣಕ ಯಂತ್ರದಲ್ಲಿ ಮಾತ್ರವೇ ಡೌನ್ಲೋಡ್ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಉಪನಿರ್ದೇಶಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು.
- ಅಲ್ಲದೆ, ತಮ್ಮ ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆ ಮುದ್ರಣಾಲಯವನ್ನು ಡಿಡಿಪಿಯು ಮೊದಲೇ ಗುರುತಿಸಬೇಕು. ಮುದ್ರಣ ಕಾರ್ಯ ಆರಂಭವಾದ ಬಳಿಕ ಖಾಸಗಿ ಮುದ್ರಣ ಚಟುವಟಿಕೆ ನಡೆಸುವಂತಿಲ್ಲ.
- ಕೇವಲ ಸರ್ಕಾರಿ ಪಿಯು ಕಾಲೇಜುಗಳನ್ನು ಮಾತ್ರ ನೋಡಲ್ ಕೇಂದ್ರವಾಗಿ ಗುರುತಿಸಿ ಆ ಕೇಂದ್ರದ ಪ್ರಾಂಶುಪಾಲರು ಮತ್ತು ಒಬ್ಬ ಉಪನ್ಯಾಸಕರನ್ನು ಪ್ರಶ್ನೆ ಪತ್ರಿಕೆ ಪಾಲಕರನ್ನಾಗಿ ನೇಮಿಸಿ ಪ್ರಶ್ನೆ ಪತ್ರಿಕೆ ಸಂರಕ್ಷಣೆ ನಿರ್ವಹಣೆ ಜವಾಬ್ದಾರಿ ವಹಿಸಬೇಕು.
- ನೋಡಲ್ ಕೇಂದ್ರದ ಒಂದು ಕೋಣೆಯಲ್ಲಿ ಕಡ್ಡಾಯವಾಗಿ ಸಿಸಿ ಕ್ಯಾಮೆರಾ ಅಳವಡಿಸಿ ಪ್ರಶ್ನೆಪತ್ರಿಕೆಗಳನ್ನು ಸುರಕ್ಷಿತವಾಗಿಟ್ಟು ಸೀಲ್ ಮಾಡಬೇಕು.
- ಪ್ರತಿ ದಿನ ಬೆಳಗ್ಗೆ 8.30ಕ್ಕೆ ಆಯಾ ದಿನದ ಪರೀಕ್ಷಾ ವಿಷಯಗಳ ಪ್ರಶ್ನೆಪತ್ರಿಕೆಗಳನ್ನು ಮಾತ್ರ ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರಿಗೆ ನೀಡಬೇಕು.
- ಯಾವುದೇ ಕಾರಣಕ್ಕೂ ಮೊದಲ ದಿನವೇ ಎಲ್ಲ ವಿಷಯಗಳ ಪ್ರಶ್ನೆ ಪತ್ರಿಕೆಗಳನ್ನು ಕಾಲೇಜುಗಳಿಗೆ ನೀಡುವಂತಿಲ್ಲ.
- ಕಾಲೇಜಿನ ಪ್ರಾಂಶುಪಾಲರು ಪ್ರಶ್ನೆ ಪತ್ರಿಕೆ ಪ್ಯಾಕೆಟ್ಗಳನ್ನು ಪರೀಕ್ಷಾ ಕೊಠಡಿಯಲ್ಲಿ ವಿದ್ಯಾರ್ಥಿಗಳ ಮುಂದೆಯೇ ತೆರೆಯಬೇಕು. ಈ ಸಂಬಂಧ ಕನಿಷ್ಠ ಇಬ್ಬರು ವಿದ್ಯಾರ್ಥಿಗಳು ಪ್ರಮಾಣೀಕರಿಸಬೇಕು ಎಂದು ಇಲಾಖೆ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ.



















