
ತಿರುಪತಿ: ಭೂ ವೈಕುಂಠ ಎಂದೇ ಕರೆಯಲಾಗುವ ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ಕಾಣಿಕೆ ರೂಪದಲ್ಲಿ ಬಂದಿದ್ದ ಸುಮಾರು ಅರ್ಧ ಕೆಜಿ ಚಿನ್ನವನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ತಿರುಮಲ ತಿರುಪತಿ ದೇವಸ್ಥಾನಮ್ ( ಟಿಟಿಡಿ)ಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ನೌಕರನೊಬ್ಬನನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ವಿ. ಪೆಂಚಲಯ್ಯ ಬಂಧಿತ ಆರೋಪಿಯಾಗಿದ್ದು ಈತ ಕಳೆದ ಒಂದು ವರ್ಷದಲ್ಲಿ 10 ರಿಂದ 15 ಸಲ ಚಿನ್ನದ ಬಿಸ್ಕೆಟ್ ಮತ್ತು ಇತರ ಆಭರಣಗಳು ಸೇರಿದಂತೆ 46 ಲಕ್ಷ ರು. ಮೌಲ್ಯದ 650 ಗ್ರಾಂ ಚಿನ್ನವನ್ನು ಕಳವು ಮಾಡಿದ ಆರೋಪ ಕೇಳಿ ಬಂದಿದೆ. ವೆಂಕಟೇಶ್ವರನ ಸನ್ನಿಧಿಗೆ ಭಕ್ತರು ನೀಡುವ ಕಾಣಿಕೆಯನ್ನು ಪರಕಾಮಣಿಯಲ್ಲಿ ವಿಂಗಡಿಸಲಾಗುತ್ತದೆ. ಅಲ್ಲಿ ಕೆಲಸ ಮಾಡುತ್ತಿದ್ದ ಪೆಂಚಲಯ್ಯ ಚಿನ್ನದ ಬಿಸ್ಕೆಟ್ ಕದಿಯಲು ಯತ್ನಿಸುತ್ತಿದ್ದಾಗ ಆತ ರೆಡ್ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದು, ಜ.12ರಂದು ಪೊಲೀಸರು ಆತನನ್ನು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.




















