
ನವದೆಹಲಿ: ಮಾಡೆಲ್ ತ್ವಿಶಾ ಶರ್ಮಾ ಸಾವಿನ ಪ್ರಕರಣದ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆ (ಸಿಬಿಐ) ವರ್ಗಾಯಿಸಲು ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಸಂಬಂಧ ಅಗತ್ಯ ಆಡಳಿತಾತ್ಮಕ ಕ್ರಮಗಳನ್ನು ತಕ್ಷಣ ಕೈಗೊಳ್ಳುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ಪೀಠವು ಪ್ರಕರಣದ ಗಂಭೀರತೆ ಹಾಗೂ ಆರೋಪಿಗಳ ಪ್ರಭಾವವನ್ನು ಪರಿಗಣಿಸಿ ಸ್ವಯಂಪ್ರೇರಿತವಾಗಿ ವಿಚಾರಣೆ ನಡೆಸಿದೆ. ಸ್ಥಳೀಯ ತನಿಖೆಯ ನಿಷ್ಪಕ್ಷಪಾತತೆ ಬಗ್ಗೆ ಅನುಮಾನ ವ್ಯಕ್ತವಾದ ಹಿನ್ನೆಲೆಯಲ್ಲಿ ಸಿಬಿಐ ತನಿಖೆಗೆ ನಿರ್ದೇಶನ ನೀಡಲಾಗಿದೆ.
ವಿಚಾರಣೆ ವೇಳೆ ಮಾಧ್ಯಮಗಳು ಸಂತ್ರಸ್ತೆ ಕುಟುಂಬ ಅಥವಾ ಆರೋಪಿಗಳ ವೈಯಕ್ತಿಕ ಹೇಳಿಕೆಗಳು ಹಾಗೂ ಊಹಾಪೋಹಗಳನ್ನು ಪ್ರಸಾರ ಮಾಡದಂತೆ ನ್ಯಾಯಾಲಯ ಮನವಿ ಮಾಡಿದೆ.
ಎಸ್ ಜಿ ತುಷಾರ್ ಮೆಹ್ತಾ, ತ್ವಿಶಾ ಅವರ ಅತ್ತೆ ಗಿರಿಬಾಲಾ ಸಿಂಗ್ ತನಿಖೆಗೆ ಸಹಕರಿಸುತ್ತಿಲ್ಲ ಹಾಗೂ ಮಾಧ್ಯಮಗಳಲ್ಲಿ ಸಂತ್ರಸ್ತೆಯ ಬಗ್ಗೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಕೋರ್ಟ್ ಗಮನಕ್ಕೆ ತಂದರು.
ನೋಯ್ಡಾದ ತ್ವಿಶಾ ಶರ್ಮಾ ಮತ್ತು ಭೋಪಾಲ್ನ ವಕೀಲ ಸಮರ್ಥ್ ಸಿಂಗ್ ಐದು ತಿಂಗಳ ಹಿಂದೆ ವಿವಾಹವಾಗಿದ್ದರು. ಮೇ 12ರಂದು ಭೋಪಾಲ್ನಲ್ಲಿರುವ ಪತಿಯ ಮನೆಯಲ್ಲಿ ತ್ವಿಶಾ ಮೃತ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕುಟುಂಬಸ್ಥರು ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಹಿಂಸೆ ಆರೋಪಿಸಿದ್ದಾರೆ.
ಎಫ್ಐಆರ್ ದಾಖಲಿಸುವಲ್ಲಿ ವಿಳಂಬ ಮತ್ತು ಸಾಕ್ಷ್ಯ ನಾಶದ ಯತ್ನ ನಡೆದಿದೆ ಎಂದು ಸಂತ್ರಸ್ತರ ಪರ ವಕೀಲರು ಆರೋಪಿಸಿದ್ದು ಈ ಹಿನ್ನೆಲೆಯಲ್ಲಿ ಮಧ್ಯಪ್ರದೇಶ ಹೈಕೋರ್ಟ್ ಸೂಚನೆಯಂತೆ ಏಮ್ಸ್ ವೈದ್ಯರ ತಂಡ ಎರಡನೇ ಮರಣೋತ್ತರ ಪರೀಕ್ಷೆ ನಡೆಸಿದೆ.
ಪ್ರಸ್ತುತ ಸಮರ್ಥ್ ಸಿಂಗ್ ಪೊಲೀಸ್ ಕಸ್ಟಡಿಯಲ್ಲಿದ್ದು, ಗಿರಿಬಾಲಾ ಸಿಂಗ್ಗೆ ನೀಡಿರುವ ನಿರೀಕ್ಷಣಾ ಜಾಮೀನು ರದ್ದುಗೊಳಿಸುವಂತೆ ಪೊಲೀಸರು ಹೈಕೋರ್ಟ್ ಮೊರೆ ಹೋಗಿದ್ದಾರೆ. ಸಿಬಿಐ ತನಿಖೆಯ ಮೇಲೆ ವಿಶ್ವಾಸವಿರಿಸಿ ಊಹಾಪೋಹಗಳಿಂದ ದೂರವಿರಲು ಸುಪ್ರೀಂ ಕೋರ್ಟ್ ಸಾರ್ವಜನಿಕರಿಗೆ ಮನವಿ ಮಾಡಿದೆ.




























