
ಬೆಂಗಳೂರು: ಯಾವುದೇ ತಪ್ಪಿಲ್ಲದೆ ಸಂಭವಿಸಿದ ರಸ್ತೆ ಅಪಘಾತಗಳಲ್ಲಿ ಮೃತಪಟ್ಟವರಿಗೆ ₹5 ಲಕ್ಷ ಹಾಗೂ ಗಾಯಗೊಂಡವರಿಗೆ ₹2.5 ಲಕ್ಷ ಪರಿಹಾರವನ್ನು ಆದಾಯದ ಮಿತಿಯನ್ನೇ ಕಾರಣವನ್ನಾಗಿ ಮಾಡಿಕೊಂಡು ನಿರಾಕರಿಸಲಾಗುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ.
ರಸ್ತೆಯಲ್ಲಿ ಅಡ್ಡಬಂದ ಎಮ್ಮೆಯನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲು ನಿರಾಕರಿಸಿದ್ದ ಮೋಟಾರು ವಾಹನ ಪರಿಹಾರ ಕ್ಲೇಮು ನ್ಯಾಯಾಧಿಕರಣದ ಆದೇಶವನ್ನು ನ್ಯಾಯಮೂರ್ತಿ ಕೆ.ಮನ್ಮಥ ರಾವ್ ಅವರ ಪೀಠ ರದ್ದುಗೊಳಿಸಿ ಆದಾಯ ₹40 ಸಾವಿರಕ್ಕಿಂತ ಹೆಚ್ಚು ಎಂಬ ಕಾರಣದಿಂದ ಅರ್ಜಿಯನ್ನು ತಿರಸ್ಕರಿಸುವುದು ಕಾನೂನುಬಾಹಿರ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಮೋಟಾರು ವಾಹನ ತಿದ್ದುಪಡಿ ಕಾಯ್ದೆ-2019ರ ಸೆಕ್ಷನ್ 164 ಪ್ರಕಾರ, ಅಪಘಾತದಲ್ಲಿ ತಪ್ಪು ಸಾಬೀತುಪಡಿಸುವ ಅಗತ್ಯವಿಲ್ಲದೆ ಮೃತರಿಗೆ ₹5 ಲಕ್ಷ ಹಾಗೂ ಗಾಯಾಳುಗಳಿಗೆ ₹2.5 ಲಕ್ಷ ಪರಿಹಾರ ಕಡ್ಡಾಯವಾಗಿದೆ. ಈ ನಿಯಮವು ಅಪಘಾತ ಸಂತ್ರಸ್ತರಿಗೆ ಸಾಮಾಜಿಕ ಭದ್ರತೆ ಒದಗಿಸುವ ಉದ್ದೇಶ ಹೊಂದಿದೆ ಎಂದು ಪೀಠ ತಿಳಿಸಿದೆ.
ಈ ದುರ್ಘಟನೆ 2014ರಲ್ಲಿ ಚಿಕ್ಕೋಡಿ-ಚಿಂಚಣಿ ಮಾರ್ಗದಲ್ಲಿ ನಡೆದಿದ್ದು, ಎಮ್ಮೆ ತಪ್ಪಿಸಲು ಹೋಗಿ ಬೈಕ್ ರಸ್ತೆ ಬದಿಯ ಕಲ್ಲಿಗೆ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದರು. ಈ ಪ್ರಕರಣದಲ್ಲಿ ವಿಮಾ ಕಂಪನಿಯೇ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ನಿರ್ದೇಶಿಸಿದೆ.





















































































