
ಹೊಸದಿಲ್ಲಿ: ಮಧ್ಯ ಪ್ರಾಂತ್ಯದಲ್ಲಿ ಮುಂದುವರಿಯುತ್ತಿರುವ ಸಂಘರ್ಷದ ಹಿನ್ನೆಲೆ ಲೋಕಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪರಿಸ್ಥಿತಿ ದೀರ್ಘಕಾಲೀನ ಪರಿಣಾಮಗಳನ್ನು ಉಂಟುಮಾಡುವ ಸಾಧ್ಯತೆ ಇರುವುದರಿಂದ ದೇಶವು ಮುನ್ನೆಚ್ಚರಿಕೆಯಿಂದ ಸಿದ್ಧರಾಗಿರಬೇಕು ಎಂದು ಹೇಳಿದರು. ಕೋವಿಡ್-19 ಸಮಯದಲ್ಲಿ ಎದುರಿಸಿದ ಸವಾಲುಗಳಂತೆ, ಇಂದಿನ ಪರಿಸ್ಥಿತಿಯನ್ನೂ ತಾಳ್ಮೆ ಮತ್ತು ಶಾಂತಿಯಿಂದ ಎದುರಿಸಬೇಕೆಂದು ಅವರು ಹೇಳಿದರು.
ಆಮದು-ರಫ್ತು ಕ್ಷೇತ್ರಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ, ಸಮಸ್ಯೆಗಳ ಮೇಲ್ವಿಚಾರಣೆಗಾಗಿ ಕೇಂದ್ರ ಸರ್ಕಾರ ವಿಶೇಷ ಸಮಿತಿಯನ್ನು ರಚಿಸಿದೆ. ಈ ಸಮಿತಿ ಪ್ರತಿದಿನ ಸಭೆ ನಡೆಸಿ ಪರಿಸ್ಥಿತಿಯನ್ನು ವಿಮರ್ಶಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಿದೆ. ದೇಶದಲ್ಲಿ ಆಹಾರ ಧಾನ್ಯಗಳ ಕೊರತೆ ಇಲ್ಲದಂತೆ ನೋಡಿಕೊಳ್ಳಲಾಗುತ್ತಿದ್ದು, ರೈತರಿಂದ ಉತ್ತಮ ಉತ್ಪಾದನೆ ದೊರೆಯುತ್ತಿದೆ ಎಂದು ಪ್ರಧಾನಿ ತಿಳಿಸಿದ್ದಾರೆ.
ಇದಲ್ಲದೆ, ಬಿತ್ತನೆ ಕಾರ್ಯಗಳು ಸುಗಮವಾಗಿ ನಡೆಯುವಂತೆ ಕ್ರಮ ಕೈಗೊಳ್ಳಲಾಗಿದೆ. ತುರ್ತು ಪರಿಸ್ಥಿತಿಗಳಿಗೆ ತಕ್ಕಂತೆ ರಸಗೊಬ್ಬರಗಳ ಪೂರೈಕೆಯನ್ನು ಕೂಡ ಸರ್ಕಾರ ಖಚಿತಪಡಿಸಿದೆ. ಅಗತ್ಯ ವಸ್ತುಗಳ ಲಭ್ಯತೆ ಮೇಲೆ ನಿರಂತರ ಗಮನ ಹರಿಸಲಾಗುತ್ತಿದೆ.
ಕಚ್ಚಾ ತೈಲ, ಅನಿಲ ಹಾಗೂ ಇತರ ಅವಶ್ಯಕ ವಸ್ತುಗಳ ಸರಬರಾಜು ನಿರಂತರವಾಗಿರುವುದಾಗಿ ಸರ್ಕಾರ ವಿಶ್ವಾಸ ವ್ಯಕ್ತಪಡಿಸಿದೆ. ಸಾಗಾಣಿಕೆ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಪೆಟ್ರೋಲ್, ಡೀಸೆಲ್ ಮತ್ತು ಅನಿಲ ಪೂರೈಕೆ ಸರಾಗವಾಗಿರಲು ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮೋದಿ ತಿಳಿಸಿದ್ದಾರೆ.





















































































