
ಹೊಸದಿಲ್ಲಿ: ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಹೊಣೆಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕಾನೂನು ಕ್ರಮ ಜರುಗುವುದಿಲ್ಲ ಎಂದು ಕೇಂದ್ರ ಸರ್ಕಾರ ಲಿಖಿತ ಭರವಸೆ ನೀಡಿದರೆ, ತಮ್ಮ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ಸಿದ್ಧ ಎಂದು ಪರಿಸರ ಹೋರಾಟಗಾರ ಸೋನಂ ವಾಂಗ್ಚುಕ್ ತಿಳಿಸಿದ್ದಾರೆ.
ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್ ಅವರಿಗೆ ಬರೆದ ಪತ್ರದಲ್ಲಿ, ಪ್ರತಿಭಟನೆಯಲ್ಲಿ ಪಾಲ್ಗೊಂಡ ಯುವಕರ ವಿರುದ್ಧ ಪ್ರತೀಕಾರದ ಕ್ರಮ ಕೈಗೊಳ್ಳುವುದಿಲ್ಲ ಎಂಬ ಸ್ಪಷ್ಟ ಭರವಸೆ ನೀಡುವಂತೆ ಅವರು ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳು ನ್ಯಾಯಸಮ್ಮತ ಮತ್ತು ಪಾರದರ್ಶಕ ಶಿಕ್ಷಣ ವ್ಯವಸ್ಥೆಗಾಗಿ ಮಾತ್ರ ಹೋರಾಟ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಸಿಜೆಪಿ ಬೆಂಬಲಿತ ಪ್ರತಿಭಟನೆಯ ಭಾಗವಾಗಿ ವಾಂಗ್ಚುಕ್ ಕಳೆದ ಮೂರು ವಾರಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಜಂತರ್ ಮಂತರ್ನಿಂದ ಪೊಲೀಸರು ಅವರನ್ನು ತೆರವುಗೊಳಿಸಿದರೂ, ಉಪವಾಸವನ್ನು ನಿಲ್ಲಿಸಲು ಅವರು ನಿರಾಕರಿಸಿದ್ದರು.
ಪ್ರಸ್ತುತ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಾಂಗ್ಚುಕ್, ಉಪವಾಸದ 25ನೇ ದಿನವೂ ಸತ್ಯಾಗ್ರಹ ಮುಂದುವರಿಸಿದ್ದಾರೆ. ಆಸ್ಪತ್ರೆಯಿಂದ ಹಂಚಿಕೊಂಡ ವೀಡಿಯೊದಲ್ಲಿ 11 ಕೆ.ಜಿ. ತೂಕ ಇಳಿಕೆಯಾಗಿದೆ ಎಂದು ತಿಳಿಸಿದ ಅವರು, “ನಾನು ಇನ್ನೂ ಜೀವಂತವಾಗಿದ್ದೇನೆ” ಎಂದು ಹೇಳಿದ್ದಾರೆ. ಪ್ರತಿಭಟನೆಯನ್ನು ಶಾಂತಿಯುತವಾಗಿ ನಡೆಸಿದ ವಿದ್ಯಾರ್ಥಿಗಳನ್ನು ಅವರು ಅಭಿನಂದಿಸಿದ್ದಾರೆ.
ಕೇಂದ್ರ ಸಚಿವರು ತಮ್ಮನ್ನು ಭೇಟಿ ಮಾಡಿ, ಪ್ರಶ್ನೆಪತ್ರಿಕೆ ಸೋರಿಕೆ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಗಳ ಕುಟುಂಬಗಳಿಗೆ ನೆರವು ನೀಡುವ ಸಾಧ್ಯತೆ ಹಾಗೂ ಪ್ರಕರಣವನ್ನು ಸಂಸತ್ತಿನಲ್ಲಿ ಚರ್ಚಿಸುವ ಭರವಸೆ ನೀಡಿದ್ದಾರೆ ಎಂದು ವಾಂಗ್ಚುಕ್ ತಿಳಿಸಿದ್ದಾರೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಬೇಡಿಕೆಯನ್ನೂ ಪರಿಗಣಿಸುವುದಾಗಿ ಹೇಳಲಾಗಿದೆ ಎಂದಿದ್ದಾರೆ.
ಸುಮಾರು 65 ಸಂಸದರು ಉಪವಾಸ ಕೈಬಿಡುವಂತೆ ಮನವಿ ಮಾಡಿದ್ದರೂ, ವಿದ್ಯಾರ್ಥಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂಬ ಭರವಸೆ ಸಿಗುವವರೆಗೂ ಸತ್ಯಾಗ್ರಹ ಮುಂದುವರಿಸುವುದಾಗಿ ವಾಂಗ್ಚುಕ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರ ಭರವಸೆ ನೀಡಿದರೆ ಲಕ್ಷಾಂತರ ಯುವಕರ ಆಶಯಗಳಿಗೆ ಸ್ಪಂದಿಸಿದಂತಾಗುತ್ತದೆ ಮತ್ತು ತಾವು ಉಪವಾಸ ಅಂತ್ಯಗೊಳಿಸುವುದಾಗಿ ತಿಳಿಸಿದ್ದಾರೆ.


















































