
ಉಡುಪಿ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿಯವರು ಆರೋಗ್ಯ ಇಲಾಖೆಯ ವಿವಿಧ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ ಬೇಸಿಗೆ ಈಗಾಗಲೇ ಪ್ರಾರಂಭಗೊಂಡಿದ್ದು ಜಿಲ್ಲೆಯಲ್ಲಿ ಜಾತ್ರೆ, ರಥೋತ್ಸವ, ಊರ ಹಬ್ಬ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿರುತ್ತವೆ. ಇಂತಹ ಸಂದರ್ಭದಲ್ಲಿ ಕರುಳು ಬೇನೆ, ಕಾಲರ, ವಿಷಮಶೀತ ಜ್ವರ, ಕಾಮಾಲೆ ಸೇರಿದಂತೆ ವಿವಿಧ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆಯಿದ್ದು ಈ ಕುರಿತು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜನರಿಗೆ ಮಾಹಿತಿ ನೀಡಬೇಕು ಎಂದು ತಿಳಿಸಿದ್ದಾರೆ.
ಜನಸಾಮಾನ್ಯರಿಗೆ ಉತ್ತಮ ಆರೋಗ್ಯ ಸೇವೆಗಳನ್ನು ಒದಗಿಸಲು ಸರ್ಕಾರ ಜಾರಿಗೊಳಿಸಿರುವ ಅನೇಕ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಪ್ರತಿಶತ ನೂರರಷ್ಟು ಅನುಷ್ಠಾನಗೊಳಿಸಿ ಪ್ರತಿಯೊಬ್ಬರು ಆರೋಗ್ಯವಾಗಿರುವಂತೆ ನೋಡಿಕೊಳ್ಳಬೇಕು.
ಜಿಲ್ಲೆಯಲ್ಲಿ ಕೆ.ಪಿ.ಎಂ.ಇ ಅಡಿ ಅನುಮತಿ ಪಡೆದ ಕ್ಲಿನಿಕ್ ಗಳು ಹಾಗೂ ಆರೋಗ್ಯ ಸಂಸ್ಥೆಗಳು ವೈದ್ಯಕೀಯ ವೆಚ್ಚದ ದರಪಟ್ಟಿ ಪ್ರದರ್ಶನ ಮಾಡುವುದು ಕಡ್ಡಾಯವಾಗಿದ್ದು ಒಂದು ವೇಳೆ ಪ್ರದರ್ಶನ ಮಾಡದಿದ್ದಲ್ಲಿ ಮೊದಲ ಬಾರಿ ನೋಟಿಸ್ ನೀಡಿ ಮತ್ತೊಮ್ಮೆ ಪುನರಾವರ್ತಿಸಿದಲ್ಲಿ ಅಂತಹ ಆರೋಗ್ಯ ಸಂಸ್ಥೆ ಅಥವಾ ಕ್ಲಿನಿಕ್ ಗಳ ಪರವಾನಿಗೆಯನ್ನು ರದ್ದು ಪಡಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.