
ಬೆಂಗಳೂರು: ರಾಜ್ಯದ ಖ್ಯಾತ ಮಾಜಿ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅವರು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದ ವೇಳೆ ದಿಢೀರ್ ಅಸ್ವಸ್ಥಗೊಂಡು ವೇದಿಕೆಯ ಮೇಲೆಯೇ ಕುಸಿದುಬಿದ್ದ ಘಟನೆ ನಡೆದಿದೆ. ತಕ್ಷಣವೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.
ಮಹಾರಾಣಿ ಕಾಲೇಜು ಸಮೀಪದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹೆಗ್ಡೆ ಅವರು ಭಾಷಣ ಮಾಡುವಾಗಲೇ ತತ್ತರಿಸಿ ಬಿದ್ದಿದ್ದಾರೆ. ಘಟನೆ ನಡೆದ ತಕ್ಷಣವೇ ಸ್ಥಳದಲ್ಲಿದ್ದವರು ಅವರನ್ನು ನೆರವಿಗೆ ಧಾವಿಸಿದ್ದಾರೆ.
ವೈದ್ಯರ ಪ್ರಾಥಮಿಕ ಪರಿಶೀಲನೆಯಲ್ಲಿ ರಕ್ತದಲ್ಲಿನ ಸಕ್ಕರೆ ಪ್ರಮಾಣ ತೀವ್ರವಾಗಿ ಕುಸಿದಿರುವುದು ಪತ್ತೆಯಾಗಿದ್ದು, ಲಘು ಹೃದಯಾಘಾತದ ಶಂಕೆಯೂ ವ್ಯಕ್ತವಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದುಬಂದಿದೆ.
ಸಾರ್ವಜನಿಕ ಜೀವನದಲ್ಲಿ ಸಕ್ರಿಯರಾಗಿದ್ದ ಹೆಗ್ಡೆ ಅವರ ಆರೋಗ್ಯದಲ್ಲಿ ಏಕಾಏಕಿ ಸಮಸ್ಯೆ ಉಂಟಾದ ಸುದ್ದಿ ಕೇಳಿ ಅಭಿಮಾನಿಗಳು ಆತಂಕಗೊಂಡಿದ್ದಾರೆ. ಶೀಘ್ರ ಗುಣಮುಖರಾಗಲೆಂದು ಹಲವರು ಪ್ರಾರ್ಥಿಸುತ್ತಿದ್ದಾರೆ.









