
ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯಲ್ಲಿ ಸ್ಮಾರ್ಟ್ ಕಾರ್ಡ್ ವ್ಯವಸ್ಥೆ ಜಾರಿಗೊಳಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಎಚ್.ಕೆ. ಪಾಟೀಲ, ಸದ್ಯ ಶಕ್ತಿ ಯೋಜನೆಯಡಿ ಮಹಿಳೆಯರು ಆಧಾರ್ ಕಾರ್ಡ್ ಅಥವಾ ಸರ್ಕಾರ ನೀಡಿರುವ ಯಾವುದೇ ಅಧಿಕೃತ ಗುರುತಿನ ಚೀಟಿಯನ್ನು ತೋರಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ಸಾಮಾನ್ಯ ದರದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿ ಹಾಗೂ ಪಾರದರ್ಶಕವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸ್ಮಾರ್ಟ್ ಕಾರ್ಡ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಶಕ್ತಿ ಯೋಜನೆಯ ಪಾರದರ್ಶಕ ಅನುಷ್ಠಾನಕ್ಕಾಗಿ ಸ್ಮಾರ್ಟ್ ಕಾರ್ಡ್ ವಿತರಿಸುವುದಾಗಿ ಸರ್ಕಾರ ಈ ಹಿಂದೆ ಘೋಷಿಸಿದ್ದರೂ, ಇದುವರೆಗೂ ಅದು ಕಾರ್ಯರೂಪಕ್ಕೆ ಬಂದಿರಲಿಲ್ಲ. ಈ ವಿಷಯದ ಕುರಿತು ಬೆಳಗಾವಿ ಅಧಿವೇಶನ ಹಾಗೂ ಜಂಟಿ ಅಧಿವೇಶನಗಳಲ್ಲಿ ಪ್ರಶ್ನೆ ಎದ್ದಿದೆ. ಜೊತೆಗೆ ಶಕ್ತಿ ಯೋಜನೆಯ ಲಾಭವನ್ನು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಮಹಿಳೆಯರೂ ಪಡೆಯುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರ ಎಸ್ಸಿಎಸ್ಪಿ/ಟಿಎಸ್ಪಿ ಅನುದಾನವನ್ನು ಬಳಸುತ್ತಿದೆ. ಆದರೆ ಆಧಾರ್ ಅಥವಾ ಇತರೆ ಗುರುತಿನ ಚೀಟಿ ಆಧಾರದಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿರುವುದರಿಂದ, ಎಷ್ಟು ಎಸ್ಸಿ–ಎಸ್ಟಿ ಮಹಿಳೆಯರು ಯೋಜನೆಯ ಪ್ರಯೋಜನ ಪಡೆದಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಹೇಗೆ ಸಿಗುತ್ತದೆ ಎಂಬ ಪ್ರಶ್ನೆಗಳು ಉದ್ಭವಿಸಿದ್ದವು. ಈ ಅನುದಾನದ ಬಳಕೆಯ ಬಗ್ಗೆ ಪ್ರತಿಪಕ್ಷದ ಜೊತೆಗೆ ಆಡಳಿತ ಪಕ್ಷದ ಸದಸ್ಯರೂ ಅನುಮಾನ ವ್ಯಕ್ತಪಡಿಸಿದ್ದರು.



















