
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿಯಲ್ಲಿರುವ ಮಾಜಿ ಡಾನ್ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ ತಡರಾತ್ರಿ ಮುತ್ತಪ್ಪ ಅವರ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ನಡೆದಿದ್ದು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.
ರಿಕ್ಕಿ ರೈ ಅವರನ್ನು ಗುರಿಯಾಗಿಸಿಕೊಂಡು 2 ಸುತ್ತಿನ ಗುಂಡಿನ ದಾಳಿ ನಡೆದಿದ್ದು ಈ ವೇಳೆ ರಿಕ್ಕಿ ರೈ, ಮೂಗು, ಕೈಗೆ ಗುಂಡು ತಾಗಿ ಗಾಯಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಘಟನೆ ಹಿನ್ನೆಲೆ:
ತಮ್ಮ ಫಾರ್ಚೂನರ್ ಕಾರಿನಲ್ಲಿ ರಿಕ್ಕಿ ರೈ ಡ್ರೈವರ್ ಮತ್ತು ಗನ್ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮನೆಯ ಕಾಂಪೌಂಡ್ ಬಳಿ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದು, ರಿಕ್ಕಿ ರೈ ಅವರಿಗೆ ಗಾಯಗಳಾಗಿವೆ. ತಕ್ಷಣವೇ ಅವರನ್ನು ಬಿಡದಿಯ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಪ್ರಾಥಮಿಕ ಚಿಕಿತ್ಸೆಯ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಘಟನೆಯ ಸ್ಥಳಕ್ಕೆ ರಾಮನಗರ ಎಸ್ಪಿ ಶ್ರೀನಿವಾಸ್ ಗೌಡ ಮತ್ತು ಡಿವೈಎಸ್ಪಿ ಶ್ರೀನಿವಾಸ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ದಾಳಿಯ ಹಿಂದಿನ ಕಾರಣ, ದುಷ್ಕರ್ಮಿಗಳ ಗುರುತು ಮತ್ತು ಈ ಘಟನೆಯ ಹಿನ್ನೆಲೆಯನ್ನು ಪತ್ತೆಹಚ್ಚಲು ತನಿಖೆ ನಡೆಸುತ್ತಿದ್ದಾರೆ.



