ರಾಜ್ಯದ ಪದವಿ, ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಎಚ್ಐವಿ ಪರೀಕ್ಷೆ ನಡೆಸಲು ಮುಂದಾದ ಸರ್ಕಾರ

ಬೆಂಗಳೂರು: ರಾಜ್ಯದ ಯುವಜನರಲ್ಲಿ ಎಚ್ಐವಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪದವಿ ಹಾಗೂ ಎಂಜಿನಿಯರಿಂಗ್ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಎಚ್ಐವಿ ತಪಾಸಣೆ ನಡೆಸಲು ರಾಜ್ಯ ಸರ್ಕಾರ ಮುಂದಾಗಿದೆ. ಸೋಂಕಿತರನ್ನು ಆರಂಭದಲ್ಲೇ ಪತ್ತೆಹಚ್ಚಿ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ.
ರಾಜ್ಯ ಏಡ್ಸ್ ನಿಯಂತ್ರಣ ಸಂಸ್ಥೆಯ ಪ್ರಕಾರ, ಕರ್ನಾಟಕ ಎಚ್ಐವಿ ಸೋಂಕಿತರ ಸಂಖ್ಯೆಯಲ್ಲಿ ದೇಶದಲ್ಲೇ ಮೂರನೇ ಸ್ಥಾನದಲ್ಲಿದೆ. ರಾಜ್ಯದಲ್ಲಿ ಸುಮಾರು 2.60 ಲಕ್ಷ ಸೋಂಕಿತರಿದ್ದು, ಅವರಲ್ಲಿ 2.05 ಲಕ್ಷ ಮಂದಿ ಎಆರ್ಟಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಸುಮಾರು 54 ಸಾವಿರ ಮಂದಿಗೆ ತಾವು ಸೋಂಕಿತರಾಗಿರುವ ಅರಿವಿಲ್ಲ ಎಂದು ಅಂದಾಜಿಸಲಾಗಿದೆ.
ಕರ್ನಾಟಕ ರಾಜ್ಯ ಏಡ್ಸ್ ತಡೆ ಸೊಸೈಟಿ ವರದಿ ಪ್ರಕಾರ, 18 ರಿಂದ 35 ವರ್ಷದೊಳಗಿನ ಯುವಕರಲ್ಲಿ ಸೋಂಕಿನ ಪ್ರಮಾಣ ವೇಗವಾಗಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಕಾಲೇಜು ಶಿಕ್ಷಣ ಇಲಾಖೆ, ವಿಟಿಯು, ಆರೋಗ್ಯ ಇಲಾಖೆ ಹಾಗೂ ಕೆಎಸ್ಎಪಿಎಸ್ ಸಹಯೋಗದಲ್ಲಿ ರಾಜ್ಯದ ಕಾಲೇಜುಗಳಲ್ಲಿ ಮೊದಲ ಬಾರಿಗೆ ಐಎಚ್ಸಿ ಶಿಬಿರದ ಜೊತೆಗೆ ಎಚ್ಐವಿ ಪರೀಕ್ಷೆ ಹಾಗೂ ಆಪ್ತ ಸಮಾಲೋಚನೆ ನಡೆಸಲು ನಿರ್ಧರಿಸಲಾಗಿದೆ.
ವಿಟಿಯು ವ್ಯಾಪ್ತಿಯ ಎಂಜಿನಿಯರಿಂಗ್ ಕಾಲೇಜುಗಳಲ್ಲಿ ಜುಲೈ 2026ರಿಂದ ಫೆಬ್ರುವರಿ 2027ರವರೆಗೆ ಬೀದಿ ನಾಟಕ, ರಸಪ್ರಶ್ನೆ, ತಜ್ಞರ ಉಪನ್ಯಾಸ ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲು ಸೂಚಿಸಲಾಗಿದೆ. ಪತ್ತೆಯಾಗದ ಸೋಂಕಿತರ ಸಂಖ್ಯೆ ಹೆಚ್ಚಿರುವ ಕಾರಣ ಪರೀಕ್ಷೆಯ ಪ್ರಮಾಣ ಹೆಚ್ಚಿಸುವ ಅಗತ್ಯವಿದೆ ಎಂದು ಕೆಎಸ್ಎಪಿಎಸ್ ತಿಳಿಸಿದೆ.
ಕಾಲೇಜು ಶಿಕ್ಷಣ ಇಲಾಖೆ ಸರ್ಕಾರಿ, ಖಾಸಗಿ ಹಾಗೂ ಅನುದಾನಿತ ಕಾಲೇಜುಗಳಲ್ಲಿ ಎಚ್ಐವಿ ಪರೀಕ್ಷೆ ಮತ್ತು ಆಪ್ತ ಸಮಾಲೋಚನೆ ನಡೆಸಲು ಸೂಚಿಸಿದ್ದು, ವಿದ್ಯಾರ್ಥಿಗಳು ಸ್ವಯಂ-ಅಪಾಯದ ಮೌಲ್ಯಮಾಪನ ಮಾಡಿಕೊಳ್ಳಲು ಮತ್ತು ಗೌಪ್ಯ ಮಾರ್ಗದರ್ಶನ ಪಡೆಯಲು ವಿಶೇಷ ಕ್ಯೂಆರ್ ಕೋಡ್ ವ್ಯವಸ್ಥೆ ಹಾಗೂ www.breakfreeindia.org ಜಾಲತಾಣವನ್ನು ಪರಿಚಯಿಸಲಾಗಿದೆ.
ಯುವಜನರಲ್ಲಿ ಎಚ್ಐವಿ ಸೋಂಕಿನ ಪ್ರಮಾಣ ಏರಿಕೆಯಾಗುತ್ತಿರುವುದು, ರಾಜ್ಯದಲ್ಲಿ ಸುಮಾರು 2.60 ಲಕ್ಷ ಸೋಂಕಿತರು ಇರುವುದಲ್ಲದೆ, ಅವರಲ್ಲಿ ಸುಮಾರು 54 ಸಾವಿರ ಮಂದಿಗೆ ತಮ್ಮ ಸೋಂಕಿನ ಅರಿವೇ ಇಲ್ಲದಿರುವುದು ಸರ್ಕಾರದ ಆತಂಕಕ್ಕೆ ಕಾರಣವಾಗಿದೆ. ಸೋಂಕನ್ನು ಆರಂಭಿಕ ಹಂತದಲ್ಲೇ ಪತ್ತೆಹಚ್ಚಿ ಚಿಕಿತ್ಸೆ ನೀಡುವುದರ ಜೊತೆಗೆ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಸೋಂಕಿನ ಹರಡುವಿಕೆಯನ್ನು ತಡೆಗಟ್ಟುವ ಉದ್ದೇಶದಿಂದ ಕಾಲೇಜುಗಳಲ್ಲಿ ಎಚ್ಐವಿ ತಪಾಸಣೆ ಹಾಗೂ ಆಪ್ತ ಸಮಾಲೋಚನೆ ಕಾರ್ಯಕ್ರಮ ಜಾರಿಗೊಳಿಸಲಾಗುತ್ತಿದೆ.


















































