
ಬೆಂಗಳೂರು: ಋತುಚಕ್ರ ರಜೆ ನೀತಿ ಜಾರಿಗೆ ಇತ್ತೀಚೆಗೆ ನಡೆದ ಸಚಿವ ಸಂಪುಟ ಅನುಮೋದನೆ ನೀಡಿದ ಹಿನ್ನೆಲೆಯಲ್ಲಿ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಬೆಂಗಳೂರಿನ ಅಧಿಕೃತ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ಋತುಚಕ್ರ ರಜೆಯನ್ನು ಸಂಬಂಧಿಸಿದ ಕಂಪನಿಗಳು ಮಹಿಳಾ ಉದ್ಯೋಗಿಗಳಿಗೆ ನೀಡಬೇಕು. ಈ ಸಂಬಂಧ ನಿಯಮ ರೂಪಿಸಲಾಗುವುದು. ಸರ್ಕಾರ ಕಾನೂನು ಮಾಡಿದ್ರೆ ಕಂಪನಿಗಳು ಪಾಲನೆ ಮಾಡಲೇಬೇಕು ಎಂದು ಎಂದು ಹೇಳಿದರು.
ಸರ್ಕಾರದ ಕಾನೂನನ್ನು ಎಲ್ಲರೂ ಅನುಷ್ಠಾನ ಮಾಡಬೇಕು, ಪಾಲಿಸಲೇಬೇಕು. ಇದನ್ನು ಕೇವಲ ಒಂದು ಕಾನೂನು ಎಂಬ ದೃಷ್ಟಿಯಲ್ಲಿ ನೋಡದೇ ಮಾನವೀಯ ದೃಷ್ಟಿಯಿಂದಲೂ ಕಂಪನಿಗಳು ನೋಡಬೇಕು. ಈ ರಜೆ ನೀತಿ ಜಾರಿ ಸಂಬಂಧ ಸ್ವಲ್ವ ದಿನದಲ್ಲಿ ಇನ್ನಷ್ಟು ಚರ್ಚೆ ಮಾಡಿ ಸಮಾಲೋಚನೆ ನಡೆಸಲಾಗುವುದು ಎಂದು ಹೇಳಿದರು.
ರಜೆ ನೀತಿ ಜಾರಿ ಸಂಬಂಧ ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಲಾಗುವುದು. ಇಲ್ಲವೇ ಸುಗ್ರೀವಾಜ್ಞೆ ಮಾಡಲಾಗುವುದು. ಕಂಪನಿಗಳಿಗೆ ಮಹಿಳಾ ಉದ್ಯೋಗಿಗೆ ಋತುಚಕ್ರ ರಜೆ ಕೊಡಬೇಕು ಎಂಬ ಸಾಮಾನ್ಯಜ್ಞಾನ, ಸೂಕ್ಷ್ಮತೆ ಇರಬೇಕು. ಹೆಣ್ಣು ಮಕ್ಕಳ ಸಮಸ್ಯೆಯನ್ನು ಕಂಪನಿ ಅರ್ಥ ಮಾಡಿಕೊಳ್ಳಬೇಕು. ಹೆಚ್ಚು ರಜೆ ಕೊಟ್ಟರೆ ಸಮಸ್ಯೆಯಾಗುತ್ತದೆ ಎಂಬ ದೂರುಗಳು ಬರತೊಡಗಿದರೆ ಅದನ್ನು ಪರಿಗಣಿಸಿ ಏನು ಮಾಡಬೇಕು ಎಂಬ ಬಗ್ಗೆ ಪರಿಶೀಲಿಸಲಾಗುವುದು ಎಂದು ಮಾಹಿತಿ ನೀಡಿದರು.






















































