
ಬೆಂಗಳೂರು : ಕೇಂದ್ರ ಬಜೆಟ್ ಮಂಡನೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಕರ್ನಾಟಕದ ಸಿಎಂ ಸಿದ್ದರಾಮಯ್ಯ ಅವರು ಕರ್ನಾಟಕಕ್ಕೆ ಒಂದು ರೀತಿ ಚೊಂಬು ಕೊಟ್ಟಿದ್ದಾರೆ. ಬಿಹಾರ, ಆಂಧ್ರಪ್ರದೇಶ ಬಿಟ್ಟರೆ ದೇಶದ ಬೇರೆ ರಾಜ್ಯಗಳಿಗೆ ಬಜೆಟ್ನಲ್ಲಿ ಅನುದಾನ ನೀಡಿಲ್ಲ. ಹಣಕಾಸು ಸಚಿವೆ ನಿರ್ಮಲಾ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ್ದರಿಂದ ವಿಶೇಷ ಅನುದಾನ ನೀಡುತ್ತಾರೆಂಬ ನಿರೀಕ್ಷೆಯಿತ್ತು. ಆದ್ರೆ, ಕರ್ನಾಟಕಕ್ಕೆ ಯಾವುದೇ ಅನುದಾನ ನೀಡದೆ ನಿರ್ಲಕ್ಷಿಸಿದ್ದಾರೆ ಎಂದು ಹೇಳಿದ್ದಾರೆ.
ಕೇಂದ್ರದಲ್ಲಿ ರಾಜ್ಯದ ಐವರು ಸಚಿವರಿದ್ದರೂ ಏನನ್ನೂ ಕೊಟ್ಟಿಲ್ಲ. ಎಚ್.ಡಿ.ಕುಮಾರಸ್ವಾಮಿ, ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶೋಭಾ ಸಚಿವರಾಗಿದ್ದಾರೆ. ಕೈಗಾರಿಕಾ ಕ್ಷೇತ್ರ, ರೈಲ್ವೆ ಇಲಾಖೆಗೂ ಏನನ್ನೂ ಕೊಡಲಿಲ್ಲ. ಬಜೆಟ್ ಮೂಲಕ ರೈತರಿಗೆ ಕೇಂದ್ರ ಸರ್ಕಾರ ಪಂಗನಾಮ ಹಾಕಿದೆ. ಒಟ್ಟಾರೆಯಾಗಿ ಇದು ನಿರಾಸದಾಯಕ, ಜನವಿರೋಧಿ ಬಜೆಟ್. ರೈತರು, ಬಡವರು, ಮಹಿಳೆಯರಿಗೆ ಬಹಳ ಅನ್ಯಾಯವಾಗಿದೆ ಎಂದು ವಾಗ್ದಾಳಿ ನಡೆಸಿದರು.
ನಿರ್ಮಲಾ ಸೀತಾರಾಮನ್ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆ ಆದ್ದರಿಂದ ಕರ್ನಾಟಕದ ಪರ ಇರುತ್ತಾರೆ, ನ್ಯಾಯ ಒದಗಿಸುತ್ತಾರೆಂಬ ನಿರೀಕ್ಷೆ ಇತ್ತು. ಅದೆಲ್ಲ ನಿರಾಸೆ ಮಾಡಿ ಅನ್ಯಾಯ ಮಾಡಿದ್ದಾರೆ. ಫೆರಿಫರಲ್ ರಿಂಗ್ ರಸ್ತೆಗೆ 6 ಸಾವಿರ ಕೋಟಿ ಕೊಡ್ತೀವಿ ಅಂದಿದ್ರು ಕೊಟ್ಟಿಲ್ಲ. ಅಪ್ಪರ್ ಭದ್ರಕ್ಕೆ 5,300 ಕೋಟಿ ಕೊಡಲಿಲ್ಲ, ಕೊಡ್ತೀವಿ ಅಂದಿದ್ರು ಕೊಡಲಿಲ್ಲ. ನಗರ ವಸತಿ ಯೋಜನೆಗಳಿಗೆ 1.2 ರಿಂದ 3 ಲಕ್ಷ ಮಾಡುತ್ತೀವಿ ಅಂದ್ರು ಕೊಡಲಿಲ್ಲ. ಮೋದಿ ಸರ್ಕಾರದ ಮೇಲೆ ಭರವಸೆ ಇಟ್ಟಿಕೊಳ್ಳಲು ಆಗುವುದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.








