
ಚೆನ್ನೈ: ತಮ್ಮ ಹೊಸ ಜನಾಂದೋಲನ ‘ವೀ ದಿ ಲೀಡರ್ಸ್’ ಮುಂದಿನ ದಿನಗಳಲ್ಲಿ ರಾಜಕೀಯ ಪಕ್ಷವಾಗಿ ರೂಪುಗೊಳ್ಳಲಿದೆ ಎಂದು ಮಾಜಿ ಬಿಜೆಪಿ ನಾಯಕ ಕೆ. ಅಣ್ಣಾಮಲೈ ತಿಳಿಸಿದ್ದಾರೆ. ತಮಿಳುನಾಡಿನ ಪೊಲ್ಲಾಚಿಯಲ್ಲಿ ನಡೆದ ಡ್ರಗ್ ಮುಕ್ತ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಈ ವಿಷಯವನ್ನು ತಿಳಿಸಿದರು.
ಧರ್ಮವು ರಾಜಕೀಯದ ವ್ಯಾಪ್ತಿಗೆ ಸೇರದು ಎಂದು ಸ್ಪಷ್ಟಪಡಿಸಿದ ಅವರು ರಾಜಕೀಯ ನಾಯಕರು ಧಾರ್ಮಿಕ ವಿಚಾರಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಜನರ ಅಭಿವೃದ್ಧಿ, ಆಡಳಿತ ಮತ್ತು ಸಾರ್ವಜನಿಕ ಹಿತದತ್ತ ಹೆಚ್ಚಿನ ಗಮನ ಹರಿಸಬೇಕು ಎಂದು ಹೇಳಿದರು.
‘ವೀ ದಿ ಲೀಡರ್ಸ್’ ಜನರ ಧ್ವನಿಯಾಗಿ ಕೆಲಸ ಮಾಡುವ ಪರ್ಯಾಯ ರಾಜಕೀಯ ಶಕ್ತಿಯಾಗಿ ಬೆಳೆಯುವ ಉದ್ದೇಶ ಹೊಂದಿದೆ. ಸಮಾಜದಲ್ಲಿ ಬದಲಾವಣೆ ತರಲು ಸಂಘಟಿತ ರಾಜಕೀಯ ವೇದಿಕೆ ಅಗತ್ಯವೆಂದು ಅವರು ಅಭಿಪ್ರಾಯಪಟ್ಟರು.
ಅಣ್ಣಾಮಲೈ ಅವರ ಈ ಹೇಳಿಕೆ ತಮಿಳುನಾಡಿನ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಜಾತಿ ಮತ್ತು ಧರ್ಮ ಆಧಾರಿತ ರಾಜಕೀಯಕ್ಕೆ ಬದಲಾಗಿ ಅಭಿವೃದ್ಧಿ ಹಾಗೂ ಜನಕಲ್ಯಾಣಕ್ಕೆ ಆದ್ಯತೆ ನೀಡುವ ರಾಜಕೀಯದ ಅಗತ್ಯವಿದೆ ಎಂದು ಅವರು ಒತ್ತಿ ಹೇಳಿದರು.
ಕರ್ನಾಟಕ ಕೇಡರ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಬಿಜೆಪಿ–ಎಐಎಡಿಎಂಕೆ ಮೈತ್ರಿಯನ್ನು ವಿರೋಧಿಸಿ ಪಕ್ಷ ತೊರೆದ ಅವರು, ಈಗ ‘ವೀ ದಿ ಲೀಡರ್ಸ್’ ಮೂಲಕ ದ್ರಾವಿಡ ಪಕ್ಷಗಳಿಗೆ ಪರ್ಯಾಯ ರಾಜಕೀಯ ಶಕ್ತಿ ಕಟ್ಟುವ ಪ್ರಯತ್ನ ನಡೆಸುತ್ತಿದ್ದಾರೆ.











































