ರಾಜ್ಯಪಾಲರಿಗೆ ಪಟ್ಟಿ ರವಾನೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ಸಚಿವ ಸಂಪುಟದ ಖಾತೆ ಹಂಚಿಕೆಗೆ ಕೊನೆಗೂ ತೆರೆ ಬಿದ್ದಿದೆ. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು 13 ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಿದ್ದು, ಅನುಮೋದನೆಗಾಗಿ ಪಟ್ಟಿಯನ್ನು ರಾಜ್ಯಪಾಲರ ಕಚೇರಿಗೆ ಕಳುಹಿಸಿದ್ದಾರೆ.
ಹೈಕಮಾಂಡ್ ಜತೆ ಸಮಾಲೋಚನೆ ನಡೆಸಿದ ಬಳಿಕ ಆಡಳಿತಕ್ಕೆ ವೇಗ ನೀಡುವ ಹಾಗೂ ಪ್ರಾದೇಶಿಕ-ಸಾಮಾಜಿಕ ಸಮತೋಲನ ಕಾಯ್ದುಕೊಳ್ಳುವ ಉದ್ದೇಶದಿಂದ ಖಾತೆ ಹಂಚಿಕೆ ಮಾಡಲಾಗಿದೆ. ಹಿರಿಯ ನಾಯಕರಿಗೆ ಪ್ರಮುಖ ಖಾತೆಗಳು ನೀಡಲಾಗಿದ್ದು, ಕೆಲ ಹೊಸ ಮುಖಗಳಿಗೂ ಜವಾಬ್ದಾರಿ ನೀಡಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹಣಕಾಸು ಹಾಗೂ ಗುಪ್ತಚರ ಖಾತೆಗಳನ್ನು ತಮ್ಮಲ್ಲೇ ಉಳಿಸಿಕೊಂಡಿದ್ದಾರೆ. ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಅವರಿಗೆ ಕಂದಾಯ ಖಾತೆ ನೀಡಲಾಗಿದೆ.
ಕೆ.ಹೆಚ್. ಮುನಿಯಪ್ಪ ಅವರಿಗೆ ಆಹಾರ ಮತ್ತು ನಾಗರಿಕ ಸರಬರಾಜು, ಕೆ.ಜೆ. ಜಾರ್ಜ್ ಅವರಿಗೆ ಇಂಧನ, ಎಂ.ಬಿ. ಪಾಟೀಲ್ ಅವರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ರಾಮಲಿಂಗ ರೆಡ್ಡಿಗೆ ಜಲಸಂಪನ್ಮೂಲ ಹಾಗೂ ಸತೀಶ್ ಜಾರಕಿಹೊಳಿ ಅವರಿಗೆ ಲೋಕೋಪಯೋಗಿ ಖಾತೆ ಹಂಚಿಕೆ ಮಾಡಲಾಗಿದೆ.
ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರು ಅಭಿವೃದ್ಧಿ, ಪ್ರಿಯಾಂಕ್ ಖರ್ಗೆ ಅವರಿಗೆ ಗೃಹ ಹಾಗೂ ಐಟಿ-ಬಿಟಿ, ಯು.ಟಿ. ಖಾದರ್ ಅವರಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಈಶ್ವರ ಖಂಡ್ರೆ ಅವರಿಗೆ ಗ್ರಾಮೀಣಾಭಿವೃದ್ಧಿ ಖಾತೆ ನೀಡಲಾಗಿದೆ.
ಡಾ. ಯತೀಂದ್ರ ಅವರಿಗೆ ನಗರಾಭಿವೃದ್ಧಿ, ಬೈರತಿ ಸುರೇಶ್ ಅವರಿಗೆ ಸಾರಿಗೆ ಹಾಗೂ ಡಾ. ಶರಣ ಪ್ರಕಾಶ ಪಾಟೀಲ್ ಅವರಿಗೆ ವೈದ್ಯಕೀಯ ಶಿಕ್ಷಣ ಖಾತೆಯ ಜವಾಬ್ದಾರಿ ವಹಿಸಲಾಗಿದೆ.





















































































