
ಬೆಂಗಳೂರು: ಪರೀಕ್ಷಾ ಕೇಂದ್ರದಲ್ಲಿ ಬ್ರಾಹ್ಮಣ ವಿದ್ಯಾರ್ಥಿಗಳೊಂದಿಗೆ ನಡೆದ ವರ್ತನೆ ಮತ್ತೆ ವಿವಾದ ಹುಟ್ಟು ಹಾಕಿದ್ದು ಅದೇನಂದರೆ ಇತ್ತೀಚಿನ ಸಿಇಟಿ ಪರೀಕ್ಷೆಯಲ್ಲಿ ಆನಂದ್ ಸುಧೀರ್ ರಾವ್ ಸೇರಿ ಹಲವು ಬ್ರಾಹ್ಮಣ ವಿದ್ಯಾರ್ಥಿಗಳಿಂದ ಜನಿವಾರ ತೆಗೆಸಿದ ಪ್ರಕರಣ ಬ್ರಾಹ್ಮಣ ಸಂಘದ ಆಕ್ರೋಶಕ್ಕೆ ಕಾರಣವಾಗಿದೆ. ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಕಠಿಣ ಕೈಗೊಳ್ಳುವಂತೆ ಆಗ್ರಹಿಸಿದೆ.
ರಾಜ್ಯದಲ್ಲಿ ಈ ವಿಷಯ ದೊಡ್ಡ ಚರ್ಚೆಗೆ ಕಾರಣವಾಗಿದ್ದು, ಜನಿವಾರ ತೆಗೆಸುವಂತಹ ಯಾವುದೇ ನಿಯಮ ಇಲ್ಲದಿದ್ದರೂ ಈ ಕ್ರಮ ಕೈಗೊಂಡಿರುವುದನ್ನು ಖಂಡಿಸಲಾಗಿದೆ. ಸಂಬಂಧಿತ ಪರೀಕ್ಷಾ ಕೇಂದ್ರದ ಪರವಾನಗಿ ರದ್ದುಪಡಿಸಿ, ಕನಿಷ್ಠ 25 ಲಕ್ಷ ರೂ. ದಂಡ ವಿಧಿಸಬೇಕು ಎಂದು ಮನವಿಯಲ್ಲಿ ಕೇಳಲಾಗಿದೆ. ಈ ಸಂಬಂಧ ಮಡಿವಾಳ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮಹಾಸಭಾ ಅಧ್ಯಕ್ಷ ಎಸ್. ರಘುನಾಥ್ ಈ ಘಟನೆಯನ್ನು ಖಂಡಿಸಿ, ಇದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರು ಮಾನಸಿಕವಾಗಿ ಹಾನಿಗೊಳಗಾಗಿದ್ದಾರೆ. ಹಿಂದೆಯೂ ಇಂತಹ ಘಟನೆ ನಡೆದ ಹಿನ್ನೆಲೆಯಲ್ಲಿ ಮಹಾಸಭಾ ಹೈಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ಭರವಸೆ ನೀಡಿದ್ದರೂ, ಮತ್ತೆ ಇದೇ ಸಮಸ್ಯೆ ಉಂಟಾಗಿದೆ. ಈ ಘಟನೆ ಬ್ರಾಹ್ಮಣ ಸಮುದಾಯದ ಮೇಲೆ ನಡೆದ ಅನ್ಯಾಯವೆಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.













