
ಕೊಪ್ಪಳ: ಕೆಲ ದಿನಗಳ ಹಿಂದೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನ ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ ತರೋದಾಗಿ ಹೇಳಿಕೆ ನೀಡಿದ್ದು ಇದೀಗ ಹಿಂದೂ- ಮುಸ್ಲಿಮರ ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಅವರ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಆಗಸ್ಟ್ 3 ರಂದು ಅನ್ಯಕೋಮಿನ ಯುವಕನಿಂದ ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಕೊಲೆ ಆಗಿತ್ತು. ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಲು ಆ.10ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್ ಈ ಹೇಳಿಕೆ ನೀಡಿದ್ದು ಆ ಮೂಲಕ ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಹೇಳಿಕೆ ನೀಡಿದ್ದರು.
ಹೀಗಾಗಿ ಕೊಪ್ಪಳದ ಕುವೆಂಪು ನಗರದ ನಿವಾಸಿ ಅಬ್ದುಲ್ ಕಲಾಂ ದೂರು ನೀಡಿದ್ದು ಯತ್ನಾಳ್ ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. ಮುಸ್ಲಿಂ ಮಹಿಳೆಯರನ್ನ ಕೀಳಾಗಿ, ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೇ ಅವರನ್ನು ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.



















