ಶಾಲಾ ಕಾಲೇಜುಗಳಲ್ಲಿ ಜನಿವಾರ-ರುದ್ರಾಕ್ಷಿ ಧಾರಣೆಗೆ ಅವಕಾಶ

ಬೆಂಗಳೂರು: ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದಕ್ಕೆ ಕರ್ನಾಟಕ ಸರ್ಕಾರ ಇದೀಗ ಅಧಿಕೃತ ಅಂತ್ಯ ಘೋಷಿಸಿದೆ. 2022ರಲ್ಲಿ ಜಾರಿಗೊಂಡಿದ್ದ ಹಿಜಾಬ್ ನಿಷೇಧಕ್ಕೆ ಸಂಬಂಧಿಸಿದ ಆದೇಶವನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂಪಡೆದು, ವಿದ್ಯಾರ್ಥಿನಿಯರಿಗೆ ಸಮವಸ್ತ್ರದೊಂದಿಗೆ ಹಿಜಾಬ್ ಧರಿಸಲು ಅವಕಾಶ ಕಲ್ಪಿಸಿದೆ. ಈ ಸಂಬಂಧ ಮೇ 13ರಂದು ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಜನಿವಾರ ತೆಗೆಸುವಂತಹ ವಿಚಾರಗಳು ಹಲವರ ಭಾವನೆಗಳಿಗೆ ನೋವುಂಟು ಮಾಡಿದ್ದವು. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಪ್ರತಿಯೊಬ್ಬರೂ ತಮ್ಮ ಸಂಪ್ರದಾಯ ಹಾಗೂ ಧಾರ್ಮಿಕ ಆಚರಣೆಗಳಿಗೆ ಅನುಗುಣವಾಗಿ ವಸ್ತ್ರ ಧರಿಸುವ ಸ್ವಾತಂತ್ರ್ಯ ಹೊಂದಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಇಲಾಖೆಯ ವ್ಯಾಪ್ತಿಯಲ್ಲಿರುವ ಎಲ್ಲಾ ಶಾಲೆ ಮತ್ತು ಕಾಲೇಜುಗಳಲ್ಲಿ ಸ್ಪಷ್ಟತೆ ಮೂಡಿಸುವ ಉದ್ದೇಶದಿಂದ 1ರಿಂದ 12ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ನಿಗದಿತ ಮಾರ್ಗಸೂಚಿ ರೂಪಿಸಲಾಗುತ್ತಿದೆ. ಹೊಸ ಶೈಕ್ಷಣಿಕ ವರ್ಷ ಆರಂಭಕ್ಕೂ ಮುನ್ನ ಈ ಕ್ರಮ ಜಾರಿಗೆ ತರಲು ಸರ್ಕಾರ ಉದ್ದೇಶಿಸಿದೆ ಎಂದು ಮಾಹಿತಿ ನೀಡಿದರು.
ಸಾಂಪ್ರದಾಯಿಕ ರೀತಿಯಲ್ಲಿ ಶೈಕ್ಷಣಿಕ ಸಂಸ್ಥೆಗಳಿಗೆ ಹೇಗೆ ಹಾಜರಾಗಬೇಕು ಎಂಬುದರ ಬಗ್ಗೆ ಈ ಆದೇಶದಲ್ಲಿ ಉಲ್ಲೇಖಿಸಲಾಗಿದ್ದು, ಯಾವುದೇ ವಿದ್ಯಾರ್ಥಿಯೂ ಒತ್ತಡದ ಅಡಿಯಲ್ಲಿ ಶಾಲೆ ಅಥವಾ ಪರೀಕ್ಷೆಗೆ ಹಾಜರಾಗಬಾರದು ಎಂಬುದು ಸರ್ಕಾರದ ನಿಲುವು. ಡಾ. ಬಾಬಾಸಾಹೇಬ್ ಅಂಬೇಡ್ಕರ್ ರಚಿಸಿದ ಸಂವಿಧಾನದ ಆಶಯಕ್ಕೆ ಅನುಗುಣವಾಗಿ ವಿದ್ಯಾರ್ಥಿಗಳ ಹಕ್ಕು ಹಾಗೂ ಸ್ವಾತಂತ್ರ್ಯ ಕಾಪಾಡುವ ಉದ್ದೇಶದಿಂದಲೇ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಧು ಬಂಗಾರಪ್ಪ ತಿಳಿಸಿದ್ದಾರೆ.






















